ADVERTISEMENT

ಆರೋಗ್ಯವೇ ಜೀವನದ ದೊಡ್ಡ ಆಸ್ತಿ: ಸಚಿವ ಚಲುವರಾಯಸ್ವಾಮಿ ಹೇಳಿಕೆ

ಗೃಹ ಆರೋಗ್ಯ ಯೋಜನೆಯ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 2:46 IST
Last Updated 22 ಜುಲೈ 2025, 2:46 IST
ಮಂಡ್ಯ ನಗರದ ಮಿಮ್ಸ್ ಬೋಧಕ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಸೋಮವಾರ ಆಯೋಜಿಸಿದ್ದ ‘ಗೃಹ ಆರೋಗ್ಯ’ ಯೋಜನೆಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶಾ ಕೈಪಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಬಿಡುಗಡೆ ಮಾಡಿದರು. ಶಾಸಕರಾದ ಪಿ.ರವಿಕುಮಾರ್‌, ಕೆ.ಎಂ.ಉದಯ್‌, ಮೈಷುಗರ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು 
ಮಂಡ್ಯ ನಗರದ ಮಿಮ್ಸ್ ಬೋಧಕ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಸೋಮವಾರ ಆಯೋಜಿಸಿದ್ದ ‘ಗೃಹ ಆರೋಗ್ಯ’ ಯೋಜನೆಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಆಶಾ ಕೈಪಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಬಿಡುಗಡೆ ಮಾಡಿದರು. ಶಾಸಕರಾದ ಪಿ.ರವಿಕುಮಾರ್‌, ಕೆ.ಎಂ.ಉದಯ್‌, ಮೈಷುಗರ್‌ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು    

ಮಂಡ್ಯ: ‘ಜೀವನದಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಉತ್ತಮ ಆರೋಗ್ಯ ಇಲ್ಲವಾದರೆ ಬದುಕೇ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ಮಿಮ್ಸ್ ಬೋಧಕ ಆಸ್ಪತ್ರೆಯ ಆಡಿಟೋರಿಯಂನಲ್ಲಿ ಆಯೋಜಿಸಿದ್ದ ‘ಗೃಹ ಆರೋಗ್ಯ’ ಯೋಜನೆಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಜ್ಯದಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮನೆ-ಮನೆಗೆ ಹೋಗಿ ಆರೋಗ್ಯ ತಪಾಸಣೆ ನಡೆಸಲು ಯೋಜನೆ ರೂಪಿಸಿದೆ. ರಾಜ್ಯದ ಪ್ರತಿಯೊಬ್ಬರೂ ‘ಗೃಹ ಆರೋಗ್ಯ’ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ADVERTISEMENT

ಬಡವರು, ವಯಸ್ಸಾದವರಿಗೆ ಹಾಗೂ ಅನಾರೋಗ್ಯವಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡಲಾಗದವರಿಗೆ ಅನುಕೂಲವಾಗಬೇಕೆಂಬುವುದೇ ಗೃಹ ಆರೋಗ್ಯ ಯೋಜನೆಯ ಉದ್ದೇಶ. ಯೋಜನೆಯಡಿ ಕೆಲಸ ನಿರ್ವಹಿಸುವ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಬಡವರಿಗೆ ಅನುಕೂಲವಾಗುವಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಎಂದು ತಿಳಿ ಹೇಳಿದರು.

ಕಾರ್ಯಕ್ರಮದಲ್ಲಿ ಮಂಡ್ಯ ಶಾಸಕ ಪಿ. ರವಿಕುಮಾರ್, ಮದ್ದೂರು ಶಾಸಕ ಕೆ.ಎಂ. ಉದಯ, ಮೈಷುಗರ್‌ ಅಧ್ಯಕ್ಷ ಸಿ.ಡಿ. ಗಂಗಾಧರ, ಜಿಲ್ಲಾಧಿಕಾರಿ ಕುಮಾರ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ‘ಮಿಮ್ಸ್’ ನಿರ್ದೇಶಕ ಡಾ. ಪಿ.ನರಸಿಂಹಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಉಪಸ್ಥಿತರಿದ್ದರು.

ಸಾಂಕ್ರಾಮಿಕ ರೋಗದ ಮಾಹಿತಿ ಸಂಗ್ರಹ:

‘ಗ್ರಾಮಗಳ ಮಟ್ಟದಲ್ಲಿ ಆಶಾ ಕಾರ್ಯಕರ್ತೆಯರು ಮನೆ– ಮನೆಗಳಿಗೆ ಭೇಟಿ ನೀಡಿ ಎನ್.ಸಿ.ಡಿ ಆ್ಯಪ್‌ನಲ್ಲಿ ಪ್ರಶ್ನಾವಳಿಗಳ ಮೂಲಕ 30 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರಿಂದ 14 ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಆ ಮಾಹಿತಿಯನ್ನು ಅಪ್ಲೋಡ್ ಮಾಡಿ ಚಿಕಿತ್ಸೆಗೆ ಅಗತ್ಯವಿದ್ದಲ್ಲಿ ನಂತರ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಶಿಫಾರಸು ಮಾಡುತ್ತಾರೆ’ ಎಂದು ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.  ಉಪಕೇಂದ್ರಗಳ ಮಟ್ಟದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳು ಆಶಾ ಕಾರ್ಯಕರ್ತೆಯರಿಂದ ಕಳುಹಿಸಲ್ಪಟ್ಟ ರೋಗಿಗಳನ್ನು ತಮ್ಮ ಮಟ್ಟದಲ್ಲಿಯೇ ಪರೀಕ್ಷೆಗೊಳಪಡಿಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳೊಡನೆ ಟೆಲಿ ಕನ್ಸಲ್‌ಟೇಷನ್ ನಡೆಸಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡಕ್ಕೆ ಸ್ಥಳದಲ್ಲಿಯೇ ಉಚಿತ ಔಷಧ ವಿತರಿಸಲಿದ್ದಾರೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.