ADVERTISEMENT

ಹೆಲಿಕಾಪ್ಟರ್‌ ಸವಾರಿ ಸದ್ಬಳಕೆ ಮಾಡಿಕೊಳ್ಳಿ: ಎನ್‌.ಚಲುವರಾಯಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 6:33 IST
Last Updated 21 ಫೆಬ್ರುವರಿ 2026, 6:33 IST
ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಬಳಿ ಬೂದನೂರು ಉತ್ಸವ ಅಂಗವಾಗಿ ಆರಂಭವಾದ ಹೆಲಿಕಾಪ್ಟರ್ ರೈಡ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಚಾಲನೆ ನೀಡಿದರು
ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಬಳಿ ಬೂದನೂರು ಉತ್ಸವ ಅಂಗವಾಗಿ ಆರಂಭವಾದ ಹೆಲಿಕಾಪ್ಟರ್ ರೈಡ್‌ಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಚಾಲನೆ ನೀಡಿದರು   

ಮಂಡ್ಯ: ‘ಬೂದನೂರು ಉತ್ಸವ ಈ ಬಾರಿ ವಿಶೇಷತೆಯಿಂದ ಕೂಡಿರುತ್ತದೆ. ಅದೇರೀತಿ ಸಾರ್ವಜನಿಕರು ಹೆಲಿಕಾಪ್ಟರ್‌ ಸವಾರಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತೇಜನ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಮನವಿ ಮಾಡಿದರು.

ನಗರದ ಹೊರವಲಯದ ಚಿಕ್ಕಮಂಡ್ಯ ಬಳಿ ಬೂದನೂರು ಉತ್ಸವ–2026 ಅಂಗವಾಗಿ ಶುಕ್ರವಾರ ಆರಂಭವಾದ ಹೆಲಿಕಾಪ್ಟರ್ ರೈಡ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ. ಇದರ ಜೊತೆಗೆ ಸಾರ್ವಜನಿಕರಿಗೆ ನೂತನವಾಗಿ ಕಾರ್ಯಕ್ರಮ ಮಾಡುವ ನಿಟ್ಟಿನಲ್ಲಿ ಹೆಲಿ ಟೂರಿಸಂ ಹಾಗೂ ಹೆಲಿಪ್ಯಾಡ್ ಸವಾರಿ ಪ್ರದರ್ಶನ ಆಯೋಜಿಸಿದೆ. ವಿವಿಧ ರೀತಿಯ ಕ್ರೀಡೆ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ಪೂರ್ಣಗೊಂಡಿವೆ. ಮಹಿಳೆಯರು ಹಾಗೂ ಮಕ್ಕಳು ಆಸಕ್ತಿಯಿಂದ ಅದರಲ್ಲಿಯೂ ಗ್ರಾಮೀಣ ಭಾಗದ ಜನತೆ ಬಹಳ ಉತ್ಸಕರಾಗಿ ಹಬ್ಬದ ರೀತಿ ಉತ್ಸವದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುವುದನ್ನು ನೋಡಿದರೆ ಸಂತಸವಾಗುತ್ತಿದೆ’ ಎಂದು ಶ್ಲಾಘಿಸಿದರು.

ADVERTISEMENT

ಅರಿವು ಕಾರ್ಯಾಗಾರಕ್ಕೆ ಬನ್ನಿ:

ಮಾ.7 ರಂದು ಜಿಲ್ಲಾಡಳಿತ ವತಿಯಿಂದ ‘ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ’ ಬಗ್ಗೆ ಅರಿವು ಕಾರ್ಯಾಗಾರವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರು ಕಾರ್ಯಾಗಾರ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಶಾಸಕರಾದ ಪಿ.ರವಿಕುಮಾರ್‌ಗೌಡ, ಕೆ.ಎಂ.ಉದಯ್, ಜಿಲ್ಲಾಧಿಕಾರಿ ಕುಮಾರ, ಜಿ.ಪಂ.ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿ.ಜೆ.ಶೋಭಾರಾಣಿ, ಉಪ ವಿಭಾಗಾಧಿಕಾರಿ ಶಿವಮೂರ್ತಿ, ತಹಶೀಲ್ದಾರ್‌ ವಿಶ್ವನಾಥ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.