ಮದ್ದೂರು: ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ನಗರವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದಲೂ ಅಪೂರ್ಣಗೊಂಡಿರುವ ಬೆಂಗಳೂರು- ಮೈಸೂರು ಹೆದ್ದಾರಿ ಕಾಮಗಾರಿಯ ಪರಿಶೀಲನೆಯನ್ನು ಶಾಸಕ ಕೆ.ಎಂ. ಉದಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದರು.
ನಗರ ಹಾಗೂ ಇತರೆಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಒಂದು ವಾರದೊಳಗೆ ಆರಂಭಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನ ನಿಡಘಟ್ಟ ಗ್ರಾಮದಿಂದ ಮದ್ದೂರು ನಗರದ ಪ್ರವಾಸಿ ಮಂದಿರದವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೂಸ್ವಾಧೀನ ಅಧಿಕಾರಿಗಳು, ಎಂಜಿನಿಯರ್ಗಳು ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳ ಜತೆಗೂಡಿ ಅಪೂರ್ಣ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಸ್ಥಳಿಯ ನಿವಾಸಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಗಳ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು, ಹಾಗೆಯೇ ಭೂಸ್ವಾಧೀನ ಪ್ರಕ್ರಿಯೆಗಳಿದ್ದರೆ ಕಾನೂನು ಕಾರ್ಯವಿಧಾನಗಳನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಉದ್ಘಾಟನೆಯಾಗಿ ಮೂರು ವರ್ಷಗಳಾಗುತ್ತಿದೆ. ಆದರೆ ಅಪೂರ್ಣಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿರ್ಲಕ್ಷ್ಯತನ ತೋರುತ್ತಿದ್ದಾರೆ. ಈಗಾಗಲೇ ಕಾಮಗಾರಿ ಸಂಬಂಧ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಯೋಜನಾ ಪ್ರಾಧಿಕಾರದ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿ ಇನ್ನೊಂದು ವಾರದೊಳಗೆ ಕಾಮಗಾರಿ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ವಾಬ್ಲೆ, ಎಂಜಿನಿಯರ್ಗಳಾದ ಅರುಣ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮೇಗೌಡ, ಸದಸ್ಯ ಪ್ರೀತಮ್ ಸೇರಿದಂತೆ ಹಲವರು ಹಾಜರಿದ್ದರು.
‘ಸ್ಥಳೀಯ ಗುತ್ತಿಗೆದಾರರ ನೇಮಕ’ ‘
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಡಿಬಿಎಲ್ ಕಂಪನಿಗೆ ನೀಡಲಾಗಿತ್ತು. ಆದರೆ ಹೆದ್ದಾರಿ ಕಾಮಗಾರಿ ಮುಗಿಸಿ ಉಳಿದ ಕಾಮಗಾರಿಗಳನ್ನು ಅಪೂರ್ಣ ಮಾಡಿ ಹೋಗಿದ್ದಾರೆ. ಈಗ ಆ ಕಾಮಗಾರಿಗಳನ್ನು ಮಾಡಲು ಅವರ ಅವಧಿ ಮುಗಿದಿದೆ. ಹೀಗಾಗಿ ಸ್ಥಳೀಯ ಗುತ್ತಿಗೆದಾರರ ಮೂಲಕ ಕಾಮಗಾರಿ ನಡೆಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ಸ್ಥಳಿಯ ಗುತ್ತಿಗೆದಾರರನ್ನು ನೇಮಿಸಿ ಕೆಲಸ ಪೂರ್ಣಗೊಳಿಸಲಾಗುವುದು’ ಎಂದು ಶಾಸಕ ಕೆ.ಎಂ. ಉದಯ ತಿಳಿಸಿದರು.
ಸಾರ್ವಜನಿಕರ ಸಹಕಾರ ಅಗತ್ಯ: ಶಾಸಕ ಕಾಮಗಾರಿಗೆ ಸಂಬಂಧಪಟ್ಟಂತೆ ಭೂಸ್ವಾಧೀನ ಪ್ರಕ್ರಿಯೆ ಎಲ್ಲ ಮುಗಿದಿದೆ. ಕಾಮಗಾರಿಯನ್ನು ನಡೆಸಲು ಅನುದಾನದ ಕೊರತೆಯಿಲ್ಲ. ಈಗಾಗಲೇ ಜಮೀನು ಮಾಲೀಕರಿಗೂ ಪರಿಹಾರ ವಿತರಣೆ ಮಾಡಲಾಗಿದೆ. ಆದರೆ ಚರಂಡಿ ಸರ್ವಿಸ್ ರಸ್ತೆ ಹಾಗೂ ನಾಲೆಗಳ ಕಾಮಗಾರಿಗಳನ್ನು ಕೈಗೊಂಡಿದ್ದ ವೇಳೆಯಲ್ಲಿ ಕೆಲವರ ವಿರೋಧ ಹಾಗೂ ತಾಂತ್ರಿಕ ಸಮಸ್ಯೆಗಳಿಂದ ಕಾಮಗಾರಿ ನಡೆಸಲು ಸಾಧ್ಯವಾಗಿಲ್ಲ. ಇದರಲ್ಲಿ ಸಾರ್ವಜನಿಕರು ಕೂಡ ಸಹಕಾರ ನೀಡದ ಪರಿಣಾಮ ಅಪೂರ್ಣ ಕಾಮಗಾರಿಯಾಗಿದೆ ಎಂದರು. ಕಾಮಗಾರಿ ಅಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆಯಲ್ಲಿ ಹಲವಾರು ಕಡೆಗಳಲ್ಲಿ ಚರಂಡಿ ರಸ್ತೆಗಳನ್ನು ಪೂರ್ಣ ಮಾಡಿಲ್ಲ. ಮಳೆ ಬಂದಾಗ ಮಳೆ ನೀರು ಸಮರ್ಪಕವಾಗಿ ಹೋಗದೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳಿಗೆ ಸಮಸ್ಯೆಯಾಗುತ್ತಿದೆ ಹಾಗೂ ಸರ್ವಿಸ್ ರಸ್ತೆಯಲ್ಲಿ ನೀರು ಹರಿಯುವುದರಿಂದ ವಾಹನ ಸವಾರರಿಗೂ ತುಂಬಾ ತೊಂದರೆಯಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.