ಮಂಡ್ಯ: ‘ವಿಧಾನಸೌಧದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲದಂತೆ ಸಚಿವರೇ ಎಲ್ಲವನ್ನೂ ಶುರು ಮಾಡಿಕೊಂಡು, ಎಷ್ಟು ಕೊಡಬೇಕೆಂದು ಆಯಾ ಇಲಾಖೆಗಳಲ್ಲಿ ಫಿಕ್ಸ್ ಮಾಡಿಕೊಂಡಿದ್ದಾರೆ. ಹೀಗಿರುವಾಗ ವಸತಿ ಇಲಾಖೆಯಲ್ಲಿ ಹಣ ಕೊಟ್ಟವರಿಗೆ ಮನೆ ಎಂದು ಶಾಸಕ ಬಿ.ಆರ್.ಪಾಟೀಲ ಅವರು ಹೇಳಿಕೆ ನೀಡಿರುವುದರಲ್ಲಿ ಆಶ್ಚರ್ಯವೇನಿಲ್ಲ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರದ ಹಲವು ಇಲಾಖೆಯಲ್ಲಿ ದುಡ್ಡು ಬಿಡುಗಡೆಗೆ ಶಾಸಕರೇ ಹಣ ಕೊಡಬೇಕು. ಕೆಲವರು ನಿಮ್ಮದೊಂದು ಲೆಟರ್ ಕೊಡಿ ಸರ್, ದುಡ್ಡು ತೆಗೆದುಕೊಂಡು ಬರುತ್ತೇವೆ ಎನ್ನುತ್ತಿದ್ದಾರೆ. ಹೆಸರಿಗೆ ಶಾಸಕರ ಲೆಟರ್, ಮಧ್ಯವರ್ತಿಗಳು ದುಡ್ಡು ಕೊಟ್ಟು ಹಣ ತರುತ್ತಾರೆ. ಬಹಳ ಮಂದಿ ನನ್ನ ಬಳಿಯೂ ಮನೆ ಮಂಜೂರು ಮಾಡಿಸಿಕೊಂಡು ತರಲು ಅಷ್ಟು ಕೊಟ್ಟಿದ್ದೇವೆ ಎಂದು ಚರ್ಚಿಸಿದ್ದಾರೆ’ ಎಂದು ತಿಳಿಸಿದರು.
‘ಈ ಸರ್ಕಾರದ ಬಗ್ಗೆ ಚರ್ಚೆಯ ಅವಶ್ಯಕತೆ ಇಲ್ಲ. ಮುಂದಿನ ಚುನಾವಣೆ ಬರುವವರೆಗೂ ಕಾಯಬೇಕು. 2028ಕ್ಕೆ ಮುಖ್ಯಮಂತ್ರಿ ಆಗುವ ಬಗ್ಗೆ ಡಿ.ಕೆ.ಶಿವಕುಮಾರ್ ಕನಸು ಕಾಣಬೇಕಷ್ಟೆ. ಅವರಿಗೆ ಕಾಂಗ್ರೆಸ್ನಲ್ಲಿ ಯಾರು ಬಿಟ್ಟು ಕೊಡುತ್ತಾರೆ? ನಮ್ಮ ಕೈಯಲ್ಲಿ ಏನೂ ಇಲ್ಲ, ಎಲ್ಲವೂ ಭಗವಂತನ ಕೈಯಲ್ಲಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.