ADVERTISEMENT

ಪತ್ನಿ ಮತ್ತು ಮಕ್ಕಳಿಗೆ ವಿಷ ಉಣಿಸಿ ಕೊಂದ ಪತಿ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 17:03 IST
Last Updated 18 ಏಪ್ರಿಲ್ 2024, 17:03 IST

ನಾಗಮಂಗಲ (ಮಂಡ್ಯ ಜಿಲ್ಲೆ): ಅಕ್ರಮ ಸಂಬಂಧದ ಹೊಂದಿದ್ದ ಪತಿಯು ತನ್ನ ಪತ್ನಿ ಮತ್ತು ಮಕ್ಕಳಿಗೆ ವಿಷ ಉಣಿಸಿ ಕೊಂದು ಯಾರಿಗೂ ಸಂದೇಹ ಬರಬಾರದು ಎಂಬ ನಿಟ್ಟಿನಲ್ಲಿ ತಾನು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಪಟ್ಟಣದ 8 ನೇ ವಾರ್ಡ್ ನ ಪೇಟೆಹೊಲದ ನಿವಾಸಿಯಾಗಿದ್ದ ತೆಂಗಿನಭಾಗ ಗ್ರಾಮದ ಸ್ವಾಮಿ ಎಂಬುವರ ಪುತ್ರ ನರಸಿಂಹ(35) ಮನೆಯಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಯಾರೂ ಇಲ್ಲದ ಸಮಯದಲ್ಲಿ ಪತ್ನಿ ಕೀರ್ತನಾ (23) ಮಕ್ಕಳಾದ ಜಯಸಿಂಹ( 3) ಮತ್ತು ರಿಷಿಕಾ(1)ರಿಗೆ ವಿಷ ಉಣಿಸಿ ಕೊಲೆ ಮಾಡಿದ್ದಾನೆ. ಆರೋಪಿ ನರಸಿಂಹ ಮದುವೆಯಾಗಿ ಮಕ್ಕಳಿದ್ದರೂ ಸಹ ಬೇರೊಬ್ಬ ಯುವತಿಯನ್ನು ಪ್ರೀತಿಸುತ್ತಿದ್ದು, ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರವಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಅಲ್ಲದೇ ಪಟ್ಟಣದಲ್ಲಿ ಹೇರ್ ಸೆಲೂನ್ ಅಂಗಡಿಯನ್ನು ಇಟ್ಟುಕೊಂಡಿದ್ದ ಆರೋಪಿ ನರಸಿಂಹ ಕಳೆದ ಕೆಲ ವರ್ಷದ ಹಿಂದೆ ಬಸರಾಳು ಹೋಬಳಿಯ ಕಂಬದಹಳ್ಳಿ ಗ್ರಾಮದ ಶಿವನಂಜು ಎಂಬುವರ ಪುತ್ರಿ ಕೀರ್ತನಾಳನ್ನು ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಗುರುವಾರ ಮಧ್ಯಾಹ್ನ ಮನೆಯಲ್ಲಿ ಪತ್ನಿ ಮತ್ತು ಮಕ್ಕಳಿಗೆ ವಿಷ ಉಣಿಸಿದ ಕೊಂದು ಯಾರಿಗೂ ಸಂದೇಹ ಬರದಿರಲಿ ಎಂದು ತಾನು ಸಹ ಅಲ್ಪ ಪ್ರಮಾಣದಲ್ಲಿ ವಿಷ ಸೇವನೆ ಮಾಡಿದ್ದು, ಮಂಡ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ವರ್ಗಾಯಿಸಲಾಗಿದೆ. ಘಟನೆಯ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.