
ಮಂಡ್ಯ: ನಾಗಮಂಗಲ ತಾಲ್ಲೂಕಿನ ವಡೇರಪುರ ಸಮೀಪದ ದೊಡ್ಡಜಟಕಾ ರಸ್ತೆಯಲ್ಲಿರುವ ಅಕ್ರಮ ಕಲ್ಲು ಗಣಿಗಾರಿಕೆ ಕ್ವಾರಿಯೊಳಗೆ ಟಿಪ್ಪರ್ ವಾಹನ ಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲೆಯ 10 ಅಧಿಕಾರಿಗಳ ವಿರುದ್ಧ ಉಪಲೋಕಾಯುಕ್ತ ಬಿ.ವೀರಪ್ಪ ಅವರು ಮಂಗಳವಾರ ಸ್ವಯಂಪ್ರೇರಿತ ದೂರು (ಸುಮೊಟೊ ಕೇಸ್) ದಾಖಲಿಸಿದ್ದಾರೆ.
‘ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದೆ ಕರ್ತವ್ಯಲೋಪ ಎಸಗಿದ್ದಾರೆ’ ಎಂಬ ಆರೋಪದ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ, ನಾಗಮಂಗಲ ತಹಶೀಲ್ದಾರ್, ಡಿವೈಎಸ್ಪಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ಮತ್ತು ಹಿರಿಯ ಭೂ ವಿಜ್ಞಾನಿ, ಆರ್ಟಿಒ, ಜಿಲ್ಲಾ ಕಾರ್ಮಿಕ ಅಧಿಕಾರಿ, ಕಾರ್ಮಿಕ ಇನ್ಸ್ಪೆಕ್ಟರ್, ತಾಲ್ಲೂಕು ಪಂಚಾಯಿತಿ ಇಒ ಮತ್ತು ಪಿಡಿಒ ವಿರುದ್ಧ ದೂರು ದಾಖಲಿಸಲಾಗಿದೆ.
ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸಿಲ್ಲ. ಅನುಮತಿ ಪಡೆಯದೇ ಅಕ್ರಮವಾಗಿ ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿಲ್ಲ. ದೂರುಗಳಿದ್ದರೂ ಕ್ರಮ ಕೈಗೊಳ್ಳದಿರುವುದು ಪರೋಕ್ಷವಾಗಿ ಅಕ್ರಮವನ್ನು ಪ್ರೋತ್ಸಾಹಿಸಿದಂತೆ ಆಗುತ್ತದೆ’ ಎಂದು ಉಪಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಮತ್ತು ಅಕ್ರಮ ಗಣಿಗಾರಿಕೆ ತಡೆಯುವಲ್ಲಿ ಕೈಗೊಂಡಿರುವ ನಿಯಂತ್ರಣ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಫೆ.16ರಂದು ಖುದ್ದು ಹಾಜರಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಪ್ರಕರಣದ ಮೇಲ್ವಿಚಾರಣೆಗಾಗಿ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಲಾಗಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೂ ಸೂಚಿಸಲಾಗಿದೆ.
ಪ್ರಕರಣವೇನು? ತಾಲ್ಲೂಕಿನ ದುಮ್ಮಸಂದ್ರ ಗ್ರಾಮದ ಚಾಲಕ ಲಕ್ಷ್ಮಣ ಅಲಿಯಾಸ್ ಲಚ್ಚಿ (45) ಟಿಪ್ಪರ್ ಲಾರಿಯಲ್ಲಿ ಜಲ್ಲಿ ತುಂಬಿಕೊಂಡು 2025ರ ಡಿ.26ರಂದು ನಸುಕಿನ ವೇಳೆ ಕಿರಿದಾದ ಕಲ್ಲುಕ್ವಾರಿಯ ರಸ್ತೆಯಲ್ಲಿ ಬರುತ್ತಿದ್ದರು. ಆ ವೇಳೆ ನಿಯಂತ್ರಣ ತಪ್ಪಿ 40 ಅಡಿ ಆಳದ ನೀರು ತುಂಬಿದ ಹಳ್ಳಕ್ಕೆ ಉರುಳಿಬಿದ್ದು ಅವಘಡ ಸಂಭವಿಸಿತ್ತು. ಎರಡನೇ ದಿನ ಲಾರಿ ಹಾಗೂ ಮೂರನೇ ದಿನ ಶವ ಪತ್ತೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.