ಮಂಡ್ಯ: ದಾನಿಗಳಿಂದ ಮಾತ್ರ ರಕ್ತ ಸಂಗ್ರಹಿಸಬಹುದು ಎನ್ನುವುದರ ಅರಿವು ಎಲ್ಲರಿಗೂ ಬಂದಾಗ ಮಾತ್ರ ರಕ್ತದ ಕೊರತೆ ನೀಗಿಸಲು ಸಾಧ್ಯವಾಗುತ್ತದೆ ಎಂದು ಮಿಮ್ಸ್ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ.ಯೋಗೇಂದರ್ ಪಟ್ವಾರಿ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ತಾಲ್ಲೂಕಿನ ಸಿದ್ದಯ್ಯನಕೊಪ್ಪಲು ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಮಂಗಳವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶದಲ್ಲಿ ಪ್ರತಿ ವರ್ಷ 20 ಮಿಲಿಯನ್ ಯೂನಿಟ್ನಷ್ಟು ರಕ್ತದ ಅವಶ್ಯಕತೆ ಇದ್ದು, ದಾನಿಗಳಿಂದ ಮಾತ್ರ ರಕ್ತ ಸಂಗ್ರಹ ಸಾಧ್ಯವಿದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಹವ್ಯಾಸ ಬೆಳೆಸಿಕೊಳ್ಳುವಂತೆ ಪ್ರೇರೇಪಿಸಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎಸ್.ಆಶಾಲತಾ ಮಾತನಾಡಿ, ‘ಆರೋಗ್ಯವಂತ ಮನುಷ್ಯ ವರ್ಷಕ್ಕೆ ಎರಡು ಬಾರಿ ರಕ್ತ ದಾನ ಮಾಡಬಹುದು. ಕನಿಷ್ಠ ವರ್ಷಕ್ಕೆ ಒಂದು ಬಾರಿಯಾದರೂ ರಕ್ತದಾನ ಮಾಡುವುದರಿಂದ ಹೊಸ ರಕ್ತದ ಬೆಳವಣಿಗೆ ಸಾಧ್ಯವಾಗುತ್ತದೆ. ಆಸ್ಪತ್ರೆಗೆ ಬರುವ ರೋಗಿಗಳ ಸಂಬಂಧಿಕರು ರಕ್ತದ ಅವಶ್ಯಕತೆ ಇದೆ ಎನ್ನುತ್ತಾರೆ, ಆದರೆ ಇಲ್ಲಿ ಸ್ವಲ್ಪ ಬದಲಾವಣೆ ಆಗಬೇಕಿದೆ, ಏನೆಂದರೆ ರಕ್ತ ತೆಗೆದುಕೊಂಡು ಬದಲಿ ರಕ್ತ ಕೊಡುವುದು ಮುಖ್ಯವಾಗಬೇಕು. ಇದರಿಂದ ಬೇರೆ ರೋಗಿಗಳಿಗೆ ಅನುಕೂಲವಾಗುತ್ತದೆ’ ಎಂದರು.
ಕಾವೇರಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಜಿ.ಸಂಗಮೇಶ್ವರ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಟ್ರಸ್ಟಿ ಪ್ರೊ.ಟಿ. ನಾಗೇಂದ್ರ, ಪ್ರಾಂಶುಪಾಲ ಪ್ರೊ.ಎ.ಎಸ್. ಶ್ರೀಕಂಠಪ್ಪ, ಉಪ ಪ್ರಾಂಶುಪಾಲ ಪ್ರೊ.ಆರ್. ಮಂಜುನಾಥ್, ಸಂಸ್ಥೆಯ ಕಾರ್ಯದರ್ಶಿ ಸಿ.ಜೆ. ಗಂಗಾಧರಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.