
ಮಂಡ್ಯ: ‘ಜಾತಿ, ಮತ, ಪಂಥ, ಧರ್ಮ ಎಲ್ಲವನ್ನೂ ಮೀರಿದ ಹಾಗೆ ಕರಾವಳಿ ವೈಭವಪೂರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅವು ಇತರರಿಗೆ ಪ್ರೇರೇಪಿಸುವಂತಿವೆ’ ಎಂದು ಸಾಹಿತಿ ಎಸ್.ಶ್ರೀನಿವಾಸ್ ಶೆಟ್ಟಿ ಅಭಿಪ್ರಾಯಪಟ್ಟರು.
ಅಖಿಲ ಕರ್ನಾಟಕ ಕರಾವಳಿ ಸಂಸ್ಕೃತಿಕ ಒಕ್ಕೂಟದ ವತಿಯಿಂದ ನಗರದ ಜಿಲ್ಲಾ ಬ್ರಾಹ್ಮಣ ಸಭಾಂಗಣದಲ್ಲಿ ಭಾನುವಾರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕರಾವಳಿ ಸಾಂಸ್ಕೃತಿಕ ಒಕ್ಕೂಟದಿಂದ ಮಾಡುತ್ತಿರುವ ಕಾರ್ಯಕ್ರಮಗಳು ಇಲ್ಲಿವರೆವಿಗೂ ವೈಭವಪೂರಿತವಾಗಿ ನಡೆದುಕೊಂಡು ಬಂದಿವೆ. ಅದನ್ನು ಮತ್ತಷ್ಟು ಗಮನ ಸೆಳೆಯುವಂತೆ ಮಾಡಲು ಜಿಲ್ಲೆಯಲ್ಲಿರುವ ಎಲ್ಲಾ ಕರಾವಳಿ ಭಾಗದವರು ಸಹಕರಿಸಿ ಸೇವಾ ಮನೋಭಾವದ ಕಾರ್ಯಕ್ರಮ ಆಯೋಜಿಸಲು ನೆರವಾಗೋಣ’ ಎಂದು ಸಲಹೆ ನೀಡಿದರು.
ಒಕ್ಕೂಟದ ಅಧ್ಯಕ್ಷ ಟಿ.ಸದಾಶಿವಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಕರಾವಳಿಯ ಹಿರಿಯ ನಾಗರಿಕರು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ನಂತರ ಕಾರಾವಳಿ ಭಾಗ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಒಕ್ಕೂಟದ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ, ಖಜಾಂಚಿ ಗೋಪಾಲಕೃಷ್ಣ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.