ಬೆಳಗಾವಿ: ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಅಂತ್ಯೋದಯ-68,908, ಆದ್ಯತಾ-10,67,855 ಹಾಗೂ ನೋಂದಾಯಿಸಿಕೊಂಡಂತಹ ಆದ್ಯತೇತರ-71,859 ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರು ಕೂಡ ಆ.10ರ ಒಳಗೆ ಚೀಟಿಯಲ್ಲಿ ನಮೂದಿಸಿದ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
‘ಈ ವಿಷಯವನ್ನು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಕಾರರು ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ನಿಯೋಜಿಸಿದ ಎಲ್ಲ ಪಡಿತರ ಚೀಟಿದಾರರ ಗಮನಕ್ಕೆ ತರಬೇಕು. ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಬೇಕು. ಇ-ಕೆವೈಸಿ ಕಾರ್ಯವನ್ನು ನ್ಯಾಯಬೆಲೆ ಅಂಗಡಿಯ ಲಾಗಿನ್ನಲ್ಲಿ ಆ.10ರ ಒಳಗಾಗಿ ಪೂರ್ಣಗೊಳಿಸಬೇಕು. ಒಂದು ವೇಳೆ ಪೂರ್ಣಗೊಳಿಸದೆ ಇದ್ದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆಯನ್ನು ಆಗಸ್ಟ್ನಿಂದ ಸರ್ಕಾರವು ಕಡಿತಗೊಳಿಸುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.
‘ನ್ಯಾಯಬೆಲೆ ಅಂಗಡಿಕಾರರು ಸಂಪೂರ್ಣವಾಗಿ ಎಲ್ಲ ಪಡಿತರ ಚೀಟಿಗಳ ಇ-ಕೆವೈಸಿ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಂತಹ ಅಂಗಡಿ ಸಂಚಾಲಕರ ಮೇಲೆ ಪಡಿತರ ದುರುಪಯೋಗ ಕುರಿತು ನಿಯಮಾನುಸಾರ ಕ್ರಮ ವಹಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.