
ಈವರೆಗೆ 15 ಜನತಾ ದರ್ಶನ ಕಾರ್ಯಕ್ರಮ | ಒಂದು ತಿಂಗಳೊಳಗೆ ಸಮಸ್ಯೆ ಇತ್ಯರ್ಥ | ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ₹15 ಕೊಟಿ ಅನುದಾನ
ಮಂಡ್ಯ: ‘ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ರೈತರು ಹಾಗೂ ಜನರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಅಲೆಯುತ್ತಿರುವುದು ಕಡು ಬಂದಿತ್ತು. ಹಾಗಾಗಿ ಜನತಾ ದರ್ಶನ ಕಾರ್ಯಕ್ರಮದ ಮೂಲಕ ನಿಮ್ಮೂರಿಗೆ ಅಧಿಕಾರಿಗಳನ್ನು ಕರೆಸಲಾಗಿದೆ. ಇದರ ಸದ್ಬಳಕೆ ಮಾಡಿಕೊಳ್ಳಿ’ ಎಂದು ಶಾಸಕ ಪಿ.ರವಿಕುಮಾರ್ ಸಲಹೆ ನೀಡಿದರು.
ತಾಲ್ಲೂಕಿನ ಬಿ.ಗೌಡಗರೆ ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಸ್ಥಳದಲ್ಲಿಯೇ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಲಾಗುವುದು. ಇತರೆ ಅರ್ಜಿಗಳ ಸಮಸ್ಯೆಗಳು ಏನಾದರೂ ಬಗೆಹರಿದಿಲ್ಲ ಎಂದರೂ ಭಯ ಬೇಡ. ಸ್ವೀಕರಿಸಿದ ಅರ್ಜಿಯನ್ನು ಒಂದು ತಿಂಗಳೊಳಗೆ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು. ಈಗಾಗಲೇ ನಿಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ₹15 ಕೊಟಿ ಅನುದಾನ ನೀಡಲಾಗಿದೆ’ ಎಂದರು.
ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ಜನರ ನಡುವೆ ಇದ್ದುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೆ ಇದು ಹೊಗಳಿಕೆ ಎನ್ನಬೇಡಿ, ತಾಲ್ಲೂಕು ಕಚೇರಿ ಅಥವಾ ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಜನರ ಸಮಸ್ಯೆಗೆ ಪರಿಹಾರ ಸಿಗಬೇಕೆಂದು ಈಗಾಗಲೇ ಬರೋಬ್ಬರಿ 15 ಜನತಾ ದರ್ಶನ ಕಾರ್ಯಕ್ರಮ ಮಾಡಿರುವುದು ಸಂತಸದ ವಿಷವಾಗಿದೆ’ ಎಂದು ಶ್ಲಾಘಿಸಿದರು.
ಶಾಸಕ ಪಿ.ರವಿಕುಮಾರ್ ಅವರನ್ನು ಪೂರ್ಣಕುಂಭದೊಂದಿಗೆ ಮೆರವಣಿಗೆ ಮೂಲಕ ಜನರು ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಸರ್ಕಲ್ ಇನ್ಸ್ಪೆಕ್ಟರ್ ಪ್ರಕಾಶ್, ಗ್ರಾ.ಪಂ.ಅಧ್ಯಕ್ಷೆ ಸವಿತಾ ಸತೀಶ್, ಮುಖಂಡರಾದ ಮದನ್, ಪ್ರಸನ್ನ, ರಾಮಚಂದ್ರೇಗೌಡ, ಜಿ.ಬಿ.ನವೀನ್ಕುಮಾರ್, ಕಟ್ಟೆದೊಡ್ಡಿ ಸಿದ್ದೇಗೌಡ ಭಾಗವಹಿಸಿದ್ದರು.
15 ದಿನದೊಳಗೆ ಪೌತಿಖಾತೆ
ತಹಶೀಲ್ದಾರ್ ವಿಶ್ವನಾಥ್ ಮಾತನಾಡಿ ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ 629 ರಲ್ಲಿ 296 ಪೌತಿಖಾತೆ ಮಾಡಲಾಗಿದೆ. ಇನ್ನೂ ಬಾಕಿ ಇರುವ ಪೌತಿಖಾತೆದಾರರು ಅರ್ಜಿ ಸಲ್ಲಿಸಿದರೆ 15 ದಿನದೊಳಗೆ ಪೌತಿಖಾತೆ ಮಾಡಿಕೊಡಲಾಗುವುದು. ಎಲ್ಲರೂ ಸಹಕರಿಸಬೇಕು. ಯಾವುದೇ ಗೊಂದಲಗಳಿದ್ದರೂ ಅದನ್ನು ಕುಳಿತು ಬಗೆಹರಿಸಿಕೊಳ್ಳಿ ಅಥವಾ ಕೋರ್ಟ್ನಲ್ಲಿ ಪ್ರಕರಣವಿದ್ದರೆ ಅದು ಬಗೆಹರಿದ ಮೇಲೆ ಕೆಲಸ ಮಾಡಿಕೊಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.