ಮಳವಳ್ಳಿ: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಭ್ರಷ್ಟಾಚಾರ ಹಿಂದೆಂದಿಗಿಂತಲೂ ಮಿತಿಮೀರಿ ಹೋಗಿರುವುದರಿಂದ ಜನರು ರೋಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ಮಳವಳ್ಳಿ ಪಟ್ಟಣದ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆಗೆ ಗುರುವಾರ ಭೇಟಿ ನೀಡಿ ಆವರಣದಲ್ಲಿನ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.
‘ಈ ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅದರಲ್ಲೂ ಬೆಂಗಳೂರು ಸುತ್ತಮುತ್ತ ಆಸ್ತಿ ಮೌಲ್ಯದ ಆಧಾರದ ಮೇಲೆ ಲಂಚ ವಸೂಲಿ ನಡೆಯುತ್ತಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪೈಪೋಟಿಯಂತೆ ಜನರಿಂದ ಸುಲಿಗೆ ಮಾಡುತ್ತಿದ್ದಾರೆ’ ಎಂದರು.
‘ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಕಾಂಗ್ರೆಸ್ ಶಾಸಕರಾದ ಬಸವರಾಜು ರಾಯರೆಡ್ಡಿ ಹಾಗೂ ರಾಜು ಕಾಗೆ ಅವರೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತಿದ್ದಾರೆ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಜಾತಿ ಸಮೀಕ್ಷೆ, ಒಳ ಮೀಸಲಾತಿ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ತಂತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ’ ಎಂದರು.
‘ಪರಿಶಿಷ್ಟ ಜಾತಿ ವರ್ಗದವರ ಅಭಿವೃದ್ಧಿಗೆ ₹42 ಸಾವಿರ ಕೋಟಿ ನೀಡಿದ್ದೇವೆ ಎನ್ನುವ ಸಿ.ಎಂ ಮೂರು ಕಾಸು ಸಹ ನೀಡಿಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ₹147 ಕೋಟಿವನ್ನು ಲೂಟಿ ಮಾಡಿದ ಈ ಸರ್ಕಾರದ ನಡೆ ನಾಚಿಕೆಗೇಡಿನ ಸಂಗತಿ. ಕಾಂಗ್ರೆಸ್ ಹೈಕಮಾಂಡ್ ಗೆ ಕರ್ನಾಟಕ ಸರ್ಕಾರ ಒಂದೇ ಸಂಪನ್ಮೂಲದ ಖಜಾನೆಯಾಗಿದೆ. ಕಪ್ಪ ಕಾಣಿಕೆ ಅರ್ಪಿಸಿ ಹೈಕಮಾಂಡ್ ನ ಒಲವು ಗಿಟ್ಟಿಸಿಕೊಳ್ಳಲು ಸಿ.ಎಂ ಹಾಗೂ ಡಿಸಿಎಂ ಪೈಪೋಟಿಗೆ ಬಿದ್ದಂತೆ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಮತಗಳ್ಳತನವಾಗಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ಅವರ ನೇತೃತ್ವದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಮತಪತ್ರಗಳ ಮೂಲಕ ಮತಗಳ್ಳತನ ನಡೆಸುತ್ತಿದ್ದ ಆರೋಪಕ್ಕೆ ಗುರಿಯಾಗಿ ಕೋರ್ಟ್ ನ ಕಾನೂನು ಕ್ರಮದಿಂದ ಪಾರಾಗಲು ದೇಶವನ್ನು ತುರ್ತು ಪರಿಸ್ಥಿತಿಗೆ ತಳ್ಳಿದ ಪಕ್ಷದ ನಾಯಕರೇ ಈಗ ಮತಗಳ್ಳತನ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಎಂದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ರುದ್ರಯ್ಯ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಯಮದೂರು ಸಿದ್ದರಾಜು, ಮುಖಂಡರಾದ ಅಪ್ಪಾಜಿಗೌಡ, ಎಚ್.ಬಸವರಾಜು, ಚಿಕ್ಕಣ್ಣ, ದೇವರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.