
ಮದ್ದೂರು: ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲ್ಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಹಲವಾರು ಗ್ರಾಮಗಳ ಹಲವಾರು ರಸ್ತೆಗಳು ಇಂದಿನವರೆಗೂ ಡಾoಬರೀಕರಣವನ್ನೇ ಕಂಡಿಲ್ಲ. ಈಗಾಗಲೇ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿರುವ ಗ್ರಾಮಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇನ್ನು ಕೆಲ ದಿನಗಳಲ್ಲೇ ಕೂಳಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಆಲೋಚನೆ ಮಾಡಿದ್ದೇನೆ’ ಎಂದರು.
ಬನ್ನಹಳ್ಳಿ ಏತ ನೀರಾವರಿ ಯೋಜನೆಯೂ ಕೂಡ ಅಂತಿಮ ಘಟ್ಟಕ್ಕೆ ತಲುಪಿದ್ದು, ಮುಂದಿನ ಬೇಸಿಗೆ ವೇಳೆಗೆ 18 ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪರಾಜು, ಮುಖಂಡರಾದ ಅರುವನಹಳ್ಳಿ ಶ್ರೀನಿವಾಸ್ ಗೌಡ, ತಿಪ್ಪುರು ಮನು,ಸಿದ್ದರಾಜು,ಜಯರಾಂ, ಮಹೇಶ್, ಎಇಇ ನವೀನ್, ಎಇ ನವೀನ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.