
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಕೆಆರ್ಎಸ್ ಅಣೆಕಟ್ಟೆಯಲ್ಲಿ ಭದ್ರತೆ ಕಲ್ಪಿಸಲಾಗಿತ್ತು
ಶ್ರೀರಂಗಪಟ್ಟಣ: ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯ ಆಸುಪಾಸಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಅಣೆಕಟ್ಟೆಯ ದಕ್ಷಿಣ ದ್ವಾರ, ಉತ್ತರ ದ್ವಾರ, ಬೃಂದಾವನ ಪ್ರವೇಶ ದ್ವಾರ ಸೇರಿದಂತೆ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಅಣೆಕಟ್ಟೆ ನಾಲ್ಕೂ ದಿಕ್ಕುಗಳಲ್ಲಿ ಕರ್ನಾಟ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್)ನ ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ಕಾವಲಿಗೆ ಇರಿಸಲಾಗಿದೆ.
‘ಅಣೆಕಟ್ಟೆ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಮೇಲಧಿಕಾರಿಗಳಿಂದ ಆದೇಶ ಬಂದಿದೆ. ಹಾಗಾಗಿ ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಾಹನಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗಿದೆ’ ಎಂದು ಕೆಎಸ್ಐಎಸ್ಎಫ್ ಕಮಾಂಡೆಂಟ್ ಪ್ರಮೋದ್ ತಿಳಿಸಿದ್ದಾರೆ.
‘ಕೆಆರ್ಎಸ್ ಅಣೆಕಟ್ಟೆ ಭದ್ರತೆಗೆ ಪ್ರತ್ಯೇಕವಾಗಿ ಕೈಗಾರಿಕಾ ಭದ್ರತಾ ಪಡೆಯೇ ಇದೆ. ಹಾಗಾಗಿ ಸಿವಿಲ್ ಪೊಲೀಸರನ್ನು ನಿಯೋಜನೆ ಮಾಡಿಲ್ಲ. ದೆಹಲಿ ಸ್ಫೋಟ ಘಟನೆಯ ನಂತರ ಕೆಆರ್ಎಸ್ಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.