ಶ್ರೀರಂಗಪಟ್ಟಣ: ತಾಲ್ಲೂಕಿನ ಕೆಆರ್ಎಸ್ ಜಲಾಶಯದಿಂದ 36 ಸಾವಿರ ಕ್ಯೂಸೆಕ್ಗೂ ಹೆಚ್ಚು ನೀರನ್ನು ಭಾನುವಾರ ಮಧ್ಯಾಹ್ನದಿಂದ ನದಿಗೆ ಹರಿಸಲಾಗುತ್ತಿದೆ.
ಕಾವೇರಿ ಕಣಿವೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಲಾಶಯಕ್ಕೆ ಹರಿದು ಬರುವ ನೀರು ಪ್ರಮಾಣ ಹೆಚ್ಚಾಗುತ್ತಿದೆ. ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ಹೊರ ಹರಿವಿನ ಪ್ರಮಾಣ 50 ಸಾವಿರ ಕ್ಯೂಸೆಕ್ವರೆಗೂ ಹೆಚ್ಚುವ ಸಾಧ್ಯತೆ ಇದ್ದು, ನದಿ ಪಾತ್ರದ ಜನ, ಜಾನುವಾರುಗಳು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ವಿ.ಜಯಂತ್ ತಿಳಿಸಿದ್ದಾರೆ.
ಅಣೆಕಟ್ಟೆಯಲ್ಲಿ ಭಾನುವಾರ ಮಧ್ಯಾಹ್ನದ ವೇಳೆಗೆ 124.46 ಅಡಿ (ಗರಿಷ್ಠ 124.80 ಅಡಿ) ನೀರು ಸಂಗ್ರಹವಾಗಿತ್ತು. ಬೆಳಿಗ್ಗೆ 12,262 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಮಧ್ಯಾಹ್ನದ ವೇಳೆಗೆ 36 ಸಾವಿರ ಕ್ಯೂಸೆಕ್ ದಾಟಿದೆ. ಹಾಗಾಗಿ ನದಿಗೆ ಹರಿಸುವ ನೀರಿನ ಪ್ರಮಾಣ ಕೂಡ ಹೆಚ್ಚಾಗಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 123.20 ಅಡಿ ನೀರಿತ್ತು. ಒಳ ಹರಿವು 16,625 ಕ್ಯೂಸೆಕ್ ಹಾಗೂ ಹೊರ ಹರಿವು 14,522 ಕ್ಯೂಸೆಕ್ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.