
ಹಲಗೂರು ಸಮೀಪದ ನಡಕಲಪುರ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಎತ್ತು ಮೃತಪಟ್ಟಿದ್ದರಿಂದ ಸಾರ್ವಜನಿಕರು ಪ್ರತಿಭಟನೆ ನಡೆಸಿದರು
ಹಲಗೂರು:ಎತ್ತಿನ ಗಾಡಿಯಲ್ಲಿ ತೆರಳುತ್ತಿದ್ದಾಗ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ನಡಕಲಪುರ ಗೇಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಸಮೀಪದ ಬ್ಯಾಡರಹಳ್ಳಿ ಗ್ರಾಮದಿಂದ ವ್ಯವಸಾಯ ಮಾಡಲು ಎತ್ತುಗಳನ್ನು ಅಣ್ಣಹಳ್ಳಿ ಗ್ರಾಮದ ಶಿವಕುಮಾರ್ ಅವರು ಕರೆ ತಂದಿದ್ದರು. ಸೋಮವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಮಳವಳ್ಳಿ ಕಡೆಯಿಂದ ಹಲಗೂರು ಕಡೆಗೆ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎತ್ತು ಸ್ಥಳದಲ್ಲೇ ಮೃತಪಟ್ಟಿದೆ. ಬಸ್ ಚಾಲಕ ಅಪಘಾತ ಮಾಡಿ, ಬಸ್ ಸಮೇತ ಪರಾರಿಯಾಗಿದ್ದಾರೆ.
ರಸ್ತೆ ತಡೆದು ಪ್ರತಿಭಟನೆ:ಅಪಘಾತ ನಡೆದ ಸ್ಥಳದಲ್ಲಿ ಸಾರ್ವಜನಿಕರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಬಸ್ ಸಂಚಾರದಲ್ಲಿ ತೊಂದರೆ ಉಂಟಾಯಿತು. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಪರದಾಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಲೋಕೇಶ ಮತ್ತು ಸಿಬ್ಬಂದಿ ಸಂಚಾರಕ್ಕೆ ತೊಂದರೆ ನೀಡದಂತೆ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.