ಶ್ರೀರಂಗಪಟ್ಟಣ: ರಾಜ್ಯ ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಲ್ಲಿ ಕೆಲವು ಮಾರ್ಪಾಟುಗಳು ಆಗಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.
ತಾಲ್ಲೂಕಿನ ಬೆಳಗೊಳ ಪಂಪ್ಹೌಸ್ ಬಳಿ ಬುಧವಾರ ನಡೆದ ಕೆಆರ್ಎಸ್ ಪಕ್ಷದ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ನಿಯಮ 79 (ಎ) (ಬಿ) ಹೊರತಾಗಿ ಕೆಲವು ವಿಶೇಷ ನಿಯಮಗಳನ್ನು ರೂಪಿಸಬೇಕು. ಕೃಷಿ ಭೂಮಿಯನ್ನು ಖರೀದಿಸುವವರು ಅನ್ಯ ಉದ್ದೇಶಗಳಿಗೆ ಪರಿವರ್ತನೆ ಮಾಡಬಾರದು. ಎರಡು ವರ್ಷಕ್ಕೆ ಒಮ್ಮೆಯಾದರೂ ಕೃಷಿ ಮಾಡುವಂತೆ ಷರತ್ತು ವಿಧಿಸಬೇಕು. 5 ವರ್ಷಗಳ ಕಾಲ ಜಮೀನು ಪಾಳು ಬಿಟ್ಟರೆ ಅದನ್ನು ಸರ್ಕಾರ ವಶಪಡಿಸಿಕೊಳ್ಳುವ ನಿಯಮ ರೂಪಿಸಬೇಕು. ಇಲ್ಲದಿದ್ದರೆ ರಿಯಲ್ ಎಸ್ಟೇಟ್ ದಂಧೆ ಮಾಡುವವರಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಸಿದರು.
ಬೆಂಗಳೂರು ಸುತ್ತಮುತ್ತ 5 ಸಾವಿರ ಎಕರೆಯಷ್ಟು ಕೃಷಿ ಭೂಮಿಯನ್ನು ಸಹಕಾರಿ ಸಂಸ್ಥೆಗಳ ಹೆಸರಿನಲ್ಲಿ ರಿಯಲ್ ಎಸ್ಟೇಟ್ ಕಂಪನಿಗಳು ಖರೀದಿಸಿವೆ. ಮೂರು ದಶಕಗಳಲ್ಲಿ ಕಂದಾಯ ಅಧಿಕಾರಿಗಳು ಭ್ರಷ್ಟಾಚಾರ ಎಸಗಿ ರೈತರನ್ನು ವಂಚಿಸಿದ್ದಾರೆ. ಈ ದಿಸೆಯಲ್ಲಿ ಸರ್ಕಾರದ ಉದ್ದೇಶಿತ ತಿದ್ದುಪಡಿ ಅಗತ್ಯ ಇದೆ. ಇದರಿಂದ ಅಕ್ರಮ ತಡೆಗೆ ಕಡಿವಾಣ ಹಾಕಲೂ ಅವಕಾಶವಿದೆ. ಆದರೆ, ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗುವ ಅಪಾಯವೂ ಇದೆ. ಹಾಗಾಗಿ ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.
ಪಕ್ಷದ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ್, ರಾಜ್ಯ ಸಮಿತಿ ಜಂಟಿ ಕಾರ್ಯದರ್ಶಿ ಸೋಮಸುಂದರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.