
ಮಂಡ್ಯ: ‘ದುರ್ಬಲ ವರ್ಗದ ಸಾರ್ವಜನಿಕರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ಕೊಡುವ ವ್ಯವಸ್ಥೆ ಜಾರಿಯಲ್ಲಿದ್ದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದು ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಎನ್. ಹೇಳಿದರು.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಲಯಗಳಲ್ಲಿ ನ್ಯಾಯ ದೊರಕಿಸಲು ಕಾನೂನು ಸೇವೆಗಳ ಪ್ರಾಧಿಕಾರ ಸಾರ್ವಜನಿಕರಿಗೆ ಸಹಾಯ ಮಾಡುತ್ತದೆ ಎಂದು ಶೇ 90ರಷ್ಟು ಜನರಿಗೆ ತಿಳಿದಿಲ್ಲ. ಜನರಿಗೆ ಕಾನೂನು ಜ್ಞಾನ ಅವಶ್ಯ ಎಂದರು.
ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧ್ವನಿ ಇಲ್ಲದವರಿಗೆ ಧ್ವನಿ ನೀಡುವ ಕಾರ್ಯ ನಿರ್ವಹಿಸುತ್ತಿದೆ’ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಆನಂದ್.ಎಂ ಮಾತನಾಡಿ ಮಕ್ಕಳಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ಹಾಗೂ ₹3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಎಲ್ಲ ಜಾತಿ ವರ್ಗದ ಜನರಿಗೆ ಉಚಿತ ಕಾನೂನು ಸೇವೆ ಹಾಗೂ ಅರಿವು ನೀಡಲಾಗುತ್ತಿದೆ. ಜಿಲ್ಲೆಯನ್ನು ಬಾಲ್ಯ ವಿವಾಹ ಮತ್ತು ಭ್ರೂಣ ಹತ್ಯೆ ಮುಕ್ತ ಮಾಡಲು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾತನಾಡಿದರು. ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.