ಮಂಡ್ಯ: ಗ್ರಾಮೀಣ ಭಾಗದ ಜನರಿಗೆ ಕಾನೂನಿನ ಅರಿವು ಇರಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಾಣಿ ಎ.ಶೆಟ್ಟಿ ಸಲಹೆ ನೀಡಿದರು.
ತಾಲ್ಲೂಕಿನ ಚೀರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಪಿಇಎಸ್ ಕಾನೂನು ಕಾಲೇಜು ಮತ್ತು ಕಾನೂನು ಸಲಹಾ ಕೇಂದ್ರ, ಜಿಲ್ಲಾ ಪಂಚಾಯಿತಿ, ಮಹಿಳಾ ಸರ್ಕಾರಿ ಕಾಲೇಜು ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಾಮ ಲೋಕ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಲೋಕ ಅದಾಲತ್ ಅನ್ನು ಬಳಸಿಕೊಳ್ಳುವ ಮೂಲಕ ಗ್ರಾಮದಲ್ಲಿ ಶಾಂತಿಯಿಂದ ಜೀವನ ನಡೆಸಬೇಕು. ಸಣ್ಣಪುಟ್ಟ ವೈಮನಸ್ಸನ್ನು ಬಿಡಬೇಕು. ಗ್ರಾಮದಲ್ಲಿ ಎಲ್ಲರನ್ನೂ ಗೌರವಿಸುವುದು ಮುಖ್ಯವಾಗಬೇಕು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.ನಳಿನಕುಮಾರಿ ಮಾತನಾಡಿ, ಲೋಕ ಅದಾಲಾತ್ ಅಂದರೆ ಏನು ಎಂಬ ಅರಿವು ಎಲ್ಲರಿಗೂ ಇರಬೇಕು. ನಮ್ಮ ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಕಾನೂನು ಸಲಹಾ ಸೇವಾ ಕೇಂದ್ರ ಕೆಲಸ ಮಾಡುತ್ತದೆ. ಕಾನೂನು ಚೌಕಟ್ಟಿನಡಿ ಸಮಸ್ಯೆ ಬಗೆಹರಿಸಿಕೊಳ್ಳುವುದನ್ನೇ ಲೋಕ ಅದಾಲತ್ ಎನ್ನುತ್ತಾರೆ ಎಂದರು.
ಸಣ್ಣಪುಟ್ಟ ಘಟನೆಗಳು ನಡೆದಿರುವುದನ್ನು ರಾಜೀ ಮಾಡಿಕೊಂಡು ಶಾಂತಿ ಕಾಪಾಡಿಕೊಳ್ಳುವುದಕ್ಕೆ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಬಂಧು ಅಕ್ಕಪಕ್ಕದ ಮನೆಯವರ ಜೊತೆಯೂ ವಿಶ್ವಾಸ ಹಾಗೂ ಸೌಹಾರ್ದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಕರಣಗಳನ್ನು ಸುಖಾಂತ್ಯ ಮಾಡಿಕೊಳ್ಳಲು ಈ ವೇದಿಕೆ ಅನುಕೂಲಕರವಾಗಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ವಿಜಯಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲ ಆರ್.ದಶರಥ್, ಪ್ರಾಧ್ಯಾಪಕಿ ಎಂ.ಕೆಂಪಮ್ಮ, ಮುಖ್ಯ ಶಿಕ್ಷಕಿ ಗಿರಿಜಾ, ವಕೀಲ ಲಕ್ಷ್ಮಣ್ ಚೀರನಹಳ್ಳಿ, ಕಾನೂನು ಸಹಾಯಕ ಪ್ರಾಧ್ಯಾಪಕ ಕೆ.ಎಚ್.ವಿಜಯ್ಕುಮಾರ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.