
ಮದ್ದೂರು: ತಾಲ್ಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನ್ನಲ್ಲಿ ಸೋಮವಾರ ರಾತ್ರಿ ಚಿರತೆ ಸೆರೆಯಾಗಿದೆ.
ಗ್ರಾಮದ ಹೊನ್ನೇಗೌಡ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಚಿರತೆ ಸಿಕ್ಕಿದೆ. ಹಲವು ದಿನಗಳಿಂದ ಚಿಕ್ಕದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಮೇಕೆಗಳನ್ನು ತಿಂದು ಹಾಕಿತ್ತು. ಇದರಿಂದ ಈ ಭಾಗದ ಗ್ರಾಮಸ್ಥರು ಭೀತಿಗೊಳಗಾಗಿದ್ದರು.ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು.
ಚಿರತೆ ಸೆರೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಈ ಭಾಗದಲ್ಲಿ ಇನ್ನು ಹಲವಾರು ಚಿರತೆಗಳು ಇದ್ದು ಅವುಗಳನ್ನೂ ಹಿಡಿಯಲು ಅರಣ್ಯಾಧಿಕಾರಿಗಳು ಆಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ತಾಲ್ಲೂಕು ಅರಣ್ಯಾಧಿಕಾರಿ ಗವಿಯಪ್ಪ, ಉಪ ವಲಯ ಅರಣ್ಯಾಧಿಕಾರಿ ಸವಿತಾ, ಗಸ್ತುಪಾಲಕ ಚಿನ್ನಪ್ಪ ಹಾಗೂ ಸಿಬ್ಬಂದಿ ಆಗಮಿಸಿ ಚಿರತೆ ಸೆರೆ ಹಿಡಿದು ಮೇಲಾಧಿಕಾರಿಗಳ ಆದೇಶ ಮೇರೆಗೆ ಚಿರತೆಯನ್ನು ಬಂಡಿಪುರ ಅರಣ್ಯ ಪ್ರದೇಶಕ್ಕೆ ಬಿಟ್ಟರು.