ADVERTISEMENT

ಮಂಡ್ಯ: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2023, 13:26 IST
Last Updated 13 ಜುಲೈ 2023, 13:26 IST
ಲಿಂಗಾಯತ ಸ್ವತಂತ್ರ ಧರ್ಮ (ಪ್ರಾತಿನಿಧಿಕ ಚಿತ್ರ)
ಲಿಂಗಾಯತ ಸ್ವತಂತ್ರ ಧರ್ಮ (ಪ್ರಾತಿನಿಧಿಕ ಚಿತ್ರ)   

ಮಂಡ್ಯ: ‘ನ್ಯಾ.ನಾಗಮೋಹನ್‌ದಾಸ್‌ ವರದಿ ಪರಿಗಣಿಸಿ ಮುಂಬರುವ ಲೋಕಸಭೆ ಚುನಾವಣೆಯೊಳಗೆ ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು. ಇಲ್ಲವಾದಲ್ಲಿ ದೇಶದಾದ್ಯಂತ ಹೋರಾಟ ಮಾಡಲಾಗುವುದು’ ಎಂದು ಕುಂಬಳಗೋಡು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಚನ್ನಬಸವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.

‘ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ ವತಿಯಿಂದ ನಿಯೋಗ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಲಾಗುವುದು. ಹಲವು ವರ್ಷಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ನನೆಗುದಿಗೆ ಬಿದ್ದಿರುವ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ಬಸವೇಶ್ವರರ ಪುತ್ಥಳಿ ನಿರ್ಮಾಣವಾಗಬೇಕು, ಸರ್ಕಾರಿ ಕಚೇರಿಗಳಲ್ಲಿ ಬಸವೇಶ್ವರರ ಭಾವಚಿತ್ರ ಹಾಕಬೇಕು. ಕನಕಪುರ ತಾಲ್ಲೂಕಿನ ಸಾತನೂರು ಬಳಿಯ ದಾಳಿಂಬ ಗ್ರಾಮದ ಶ್ರೀಗುರು ಬಸವೇಶ್ವರ ಪ್ರಾರ್ಥನಾ ಮಂದಿರದ ಉದ್ಘಾಟನೆ ಹಾಗೂ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮ ಜುಲೈ 23ರಂದು ನಡೆಯಲಿದೆ’ ಎಂದರು.

ADVERTISEMENT

ಲಿಂಗಾಯತ ಮಹಾಸಭಾ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ಮಂಜುನಾಥ್ ಬೆಟ್ಟಹಳ್ಳಿ, ಶಿವಲಿಂಗಯ್ಯ, ನಂದೀಶ್, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.