ಶ್ರೀರಂಗಪಟ್ಟಣ: ‘ಜೆಡಿಎಸ್ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುವವರು ಇಲ್ಲದ ಕಾರಣ ಕ್ಷೇತ್ರದಲ್ಲಿ ಅತಂತ್ರ ಸ್ಥಿತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.
ತಾಲ್ಲೂಕಿನ ತಡಗವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಸೇರಿದ ಜೆಡಿಎಸ್ ಕಾರ್ಯಕರ್ತರನ್ನು ಶನಿವಾರ ಅಭಿನಂದಿಸಿ ಅವರು ಮಾತನಾಡಿದರು.
‘ಜೆಡಿಎಸ್ ಪಕ್ಷದಲ್ಲಿ ಇರುವವರ ಕಷ್ಟಗಳಿಗೆ ಯಾರೂ ಕಿವಿಗೊಡುತ್ತಿಲ್ಲ. ಆ ಪಕ್ಷದ ಮುಖಂಡರು ಸಾಮಾನ್ಯರಿಗೆ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾರ್ಯಕರ್ತರು ಭ್ರಮನಿರಶನಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಒಂದು ತಿಂಗಳ ಈಚೆಗೆ ಕ್ಷೇತ್ರದ ವಿವಿಧೆಡೆ 500ಕ್ಕೂ ಹೆಚ್ಚು ಮಂದಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಕಾಂಗ್ರೆಸ್ ಸೇರಲಿದ್ದಾರೆ. ಪಕ್ಷ ಸೇರುವವರನ್ನು ಗೌರವದಿಂದ ನಡೆಸಿಕೊಳ್ಳಲಾಗುವುದು’ ಎಂದು ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.
‘ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಇದೇ ಜಿಲ್ಲೆಯಲ್ಲಿ ಹುಟ್ಟಿ ಬೆಳೆದವರು. ಸರಳ, ಸಜ್ಜನಿಕೆಗೆ ಹೆಸರಾದವರು. ಪಸಕ್ತ ಚುನಾವಣೆಯಲ್ಲಿ ಅವರು ಜಯಗಳಿಸಿದರೆ ಅಭಿವೃದ್ಧಿ ಕೆಲಸಗಳಿಗೆ ಮತ್ತಷ್ಟು ವೇಗ ಸಿಗಲಿದೆ. ಜಿಲ್ಲೆಯ ಪ್ರಗತಿಯ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕು’ ಎಂದು ಅವರು ಮನವಿ ಮಾಡಿದರು.
ತಡಗವಾಡಿ ಗ್ರಾಮದ ಸಿದ್ದೇಗೌಡ, ರಮೇಶ್, ಜಿತಿನ್, ಬಸವರಾಜು, ಮಂಜು, ಪುಟ್ಟು, ಸಂತೋಷ್, ನವೀನ್, ಬಳ್ಳಾರಿಗೌಡ, ಚಿಕ್ಕೈದೇಗೌಡ, ಶಂಕರ್, ಸುರೇಶ್, ದೇವೇಗೌಡ, ಕೆಂಪಲಿಂಗೇಗೌಡ, ಮಲ್ಲಪ್ಪ, ಚಂದ್ರಹಾಸ, ಪೂಜಾರಿ, ಚಂದ್ರಹಾಸ, ನಿಂಗಣ್ಣ ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದರು.
ಮುಖಂಡರಾದ ಯತೀಶ್, ದಯಾನಂದ್ ಈ ಸಂದರ್ಭದಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.