ಮದ್ದೂರು: ಪಟ್ಟಣದಲ್ಲಿ ಮದ್ದೂರಮ್ಮ ನವರ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಿಡಿ ಉತ್ಸವ ಹಾಗೂ ಉಗ್ರ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವವು ವಿಜೃಂಭಣೆಯಿಂದ ನಡೆಯಿತು.
ಸಾವಿರಾರು ಭಕ್ತರು ಮದ್ದೂರಮ್ಮ ದೇವರಿಗೆ ಪೂಜೆ ಸಲ್ಲಿಸಿದರು. ಸಿಡಿ ಉತ್ಸವದ ಅಂಗವಾಗಿ ಸಂಜೆ ಸಿಡಿರಣ್ಣನ ಉತ್ಸವ ನಡೆಯಿತು. ವಿವಿಧ ಕಡೆಗಳಿಂದ ಬಂದಿದ್ದ ಪೋಷಕರು ಸಿಡಿರಣ್ಣನ ತೊಟ್ಟಿಲಿನಲ್ಲಿ ಮಕ್ಕಳನ್ನು ಕೂರಿಸಿ ಹರಕೆ ತೀರಿಸಿದರು. ತೊಟ್ಟಿಲಲ್ಲಿ ಮಕ್ಕಳನ್ನು ಕೂರಿಸಿ ತೂಗುವುದರಿಂದ ಆ ಮಗುವಿಗೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಈ ಉತ್ಸವ ನೋಡಲು ಸಾವಿರಾರು ಮಂದಿ ನೆರೆದಿದ್ದರು. ಮೈಸೂರು– ಬೆಂಗಳೂರು ಹೆದ್ದಾರಿಯಲ್ಲಿ ಜನ ದಟ್ಟಣೆ ಹೆಚ್ಚಾಗಿತ್ತು.
ಉಗ್ರ ನರಸಿಂಹಸ್ವಾಮಿ ಉತ್ಸವ ಮೂರ್ತಿಗೆ ಹೂವಿನ ಅಲಂಕಾರ ಮಾಡಲಾಗಿತ್ತು. ರಥೋತ್ಸವಕ್ಕೆ ತಹಶೀಲ್ದಾರ್ ಗೀತಾ ಚಾಲನೆ ನೀಡಿದರು. ಭಕ್ತರು ರಥಕ್ಕೆ ಬಾಳೆಹಣ್ಣು ಜವನ ಎಸೆದು ಹರಕೆ ತೀರಿಸಿದರು.
ಪಟ್ಟಣದ ಕೋಟೆ ಬೀದಿಯಲ್ಲಿರುವ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ಮಧು ಅಭಿಷೇಕ ಮಾಡಲಾಯಿತು. ಮಹಾಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.