ಶ್ರೀರಂಗಪಟ್ಟಣ: ಡೆಂಗಿ, ಚಿಕೂನ್ ಗುನ್ಯಾ, ಆನೆಕಾಲು ರೋಗ, ಮಿದುಳು ಜ್ವರ ಇತರ ಕಾಯಿಲೆಗಳನ್ನು ಹರಡುವ ಸೊಳ್ಳೆಗಳ ಉತ್ಪತ್ತಿ ತಡೆಯಬೇಕಾದರೆ ಜನ ವಸತಿ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಯೋಗ ತರಬೇತುದಾರ ಕೆ.ಶೆಟ್ಟಹಳ್ಳಿ ಅಪ್ಪಾಜಿ ಸಲಹೆ ನೀಡಿದರು.
ತಾಲ್ಲೂಕಿನ ಕೆ. ಶೆಟ್ಟಹಳ್ಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಗುರುವಾರ ಹಮ್ಮಿಕೊಂಡಿದ್ದ ಡೆಂಗಿ ಮತ್ತು ಚಿಕೂನ್ ಗುನ್ಯಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಮಳೆಗಾಲದಲ್ಲಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ನಿಂತ ನೀರಿನಲ್ಲಿ ಸೊಳ್ಳೆಗಳು ಮೊಟ್ಟೆ ಇಡುತ್ತವೆ. ಹಾಗಾಗಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ತುಂಬುವ ಸಿಮೆಂಟ್ ತೊಟ್ಟಿ ಮತ್ತು ಪಾತ್ರೆಗಳನ್ನು ವಾರಕ್ಕೆ ಒಮ್ಮೆ ತೊಳೆದು ಒಣಗಿಸಬೇಕು. ಎಳನೀರು ಚಿಪ್ಪು, ಪ್ಲಾಸ್ಟಿಕ್ ಲೋಟದಂತಹ ವಸ್ತುಗಳನ್ನು ತಕ್ಷಣ ವಿಲೇವಾರಿ ಮಾಡಬೇಕು’ ಎಂದು ಹೇಳಿದರ.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ, ‘ಡೆಂಗಿ ಅಥವಾ ಚಿಕೂನ್ ಗುನ್ಯಾ ಲಕ್ಷಣಗಳು ಕಂಡು ಬಂದರೆ ಸಮೀಪ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಲಗುವ ಸ್ಥಳದಲ್ಲಿ ಸೊಳ್ಳೆ ಪರದೆ ಕಟ್ಟಬೇಕು. ಸೊಳ್ಳೆ ನಿರೋಧಕಗಳನ್ನು ಬಳಸಬೇಕು’ ಎಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಜ, ಆರೋಗ್ಯ ನಿರೀಕ್ಷಣಾಧಿಕಾರಿ ಫಣೀಂದ್ರ, ಎನ್ಎಸ್ಎಸ್ ಶಿಬಿರಾಧಿಕಾರಿ ಮೂರ್ತಿ ಐ.ಆರ್, ಚಂದನ್, ಮಮತಾ, ಸುಧಾಮಣಿ, ಗೌರಮ್ಮ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.