ಮಳವಳ್ಳಿ: ಪಕ್ಷವನ್ನು ತಳಮಟ್ಟದಿಂದ ಮತ್ತೆ ಸಂಘಟಿಸಿ, ಲೋಪದೋಷಗಳನ್ನು ಸರಿಪಡಿಸಿಕೊಂಡು 2028ರ ಚುನಾವಣೆಯಲ್ಲಿ ಕ್ಷೇತ್ರವನ್ನು ಜೆಡಿಎಸ್ ವಶಕ್ಕೆ ಪಡೆಯಲಾಗುವುದು ಎಂದು ಇತ್ತೀಚಿನ ಜೆಡಿಎಸ್ ಪಕ್ಷದ ಪರಾಜಿತ ಅಭ್ಯರ್ಥಿ ಡಾ.ಕೆ.ಅನ್ನದಾನಿ ತಿಳಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಯಾರ ಮನಸ್ಸಿಗೂ ಬೇಸರವಾಗದ ರೀತಿಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಡೆದುಕೊಳ್ಳುತ್ತೇನೆ. ಚುನಾವಣೆಯ ವೇಳೆ ನನ್ನ ನಡವಳಿಕೆ ಹಾಗೂ ಸಣ್ಣಪುಟ್ಟ ವ್ಯತ್ಯಾಸಗಳಿಂದ ನೋವಾಗಿದ್ದರೆ ಕಾರ್ಯಕರ್ತರಲ್ಲಿ, ಮತದಾರರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಶಾಸಕನಾಗಿದ್ದಾಗ ತಾರತಮ್ಯ ಇಲ್ಲದೆ ಕ್ಷೇತ್ರದ ಜನರ ವಿಶ್ವಾಸಗಳಿಸಿ, ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಮತದಾರರು ಬದಲಾವಣೆ ಬಯಸಿ ಕಾಂಗ್ರೆಸ್ ಯೋಜನೆಗಳಿಗೆ ಮನಸೋತಿರಬಹುದು. ಯಾವುದಕ್ಕೂ ತಲೆಕೆಡಿಸಿಕೊಳ್ಳದೆ, ಜನರೊಂದಿಗೆ ಸದಾ ಇದ್ದು, ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ವರಿಷ್ಠರು ಆತ್ಮಸ್ಥೈರ್ಯ ತುಂಬಿದ್ದು, ಪಕ್ಷವನ್ನು ಮತ್ತೆ ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳನ್ನು ತಿಳಿಸಿದ್ದಾರೆ. ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಮಾರ್ಗದರ್ಶನ ಮತ್ತು ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರದಿಂದ ಪಕ್ಷವನ್ನು ಗಟ್ಟಿಗೊಳಿಸಲಾಗುವುದು ಎಂದರು.
ಪುರಸಭೆ ಸದಸ್ಯರಾದ ಎಂ.ಟಿ.ಪ್ರಶಾಂತ್, ನೂರುಲ್ಲಾ, ನಾಗೇಶ್, ಕುಮಾರ್, ಸಿದ್ದರಾಜು, ಟಿ.ನಂದಕುಮಾರ್, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ಜಯರಾಮು, ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬಿ.ರವಿ ಕಂಸಾಗರ, ಮುಖಂಡರಾದ ಕಾಂತರಾಜ್, ಪೊತ್ತಂಡೆ ನಾಗರಾಜ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.