ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಗೆ ಬುಧವಾರ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ವಿದ್ಯಾಸಂಸ್ಥೆ ಕಾರ್ಯದರ್ಶಿ ಲಂಕೇಶ್ ಅವರಿಂದ ಮಾಹಿತಿ ಪಡೆದರು. ಆಯೋಗದ ಸದಸ್ಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಇದ್ದರು.
ಮಂಡ್ಯ: ‘ಮಳವಳ್ಳಿ ತಾಲ್ಲೂಕಿನಲ್ಲಿ ಕಲುಷಿತ ಆಹಾರ ಸೇವಿಸಿ ಮೇಘಾಲಯ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 40ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿರುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದರು.
ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಗೆ ಬುಧವಾರ ಮೇಘಾಲಯ ಆಡಳಿತ ಇಲಾಖೆಯ ಆಯುಕ್ತ ಸಿರಿಲ್ ಡರ್ಲಾಂಗ್ ಅವರ ತಂಡದೊಂದಿಗೆ ಭೇಟಿ ನೀಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಪಿ. ವೀರಭದ್ರಪ್ಪ, ಸ್ಥಳೀಯ ವೈದ್ಯಾಧಿಕಾರಿ ಡಾ.ಸಚಿನ್ ಡಿ.ಗೌಡ ಅವರಿಂದ ಮಕ್ಕಳ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು. ನಂತರ ಸಿಪಿಐ ಬಿ.ಜಿ.ಮಹೇಶ್ ಅವರಿಂದ ಪ್ರಕರಣದ ತನಿಖೆ ಬಗ್ಗೆ ವಿಚಾರಿಸಿದರು.
‘ಮಕ್ಕಳಿಗೆ ಹೊರಗಡೆಯ ಊಟ ನೀಡುವುದು ಸರಿಯಲ್ಲ. ಗೋಕುಲ ವಿದ್ಯಾಸಂಸ್ಥೆಯ ಬೇಜವಾಬ್ದಾರಿತನದಿಂದ ಇಂಥ ಘಟನೆ ನಡೆದಿದೆ. ಸೇವೆ ಮಾಡುವ ಮೊದಲು ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೇ ಸರ್ಕಾರಿ ವಿದ್ಯಾರ್ಥಿ ನಿಲಯಕ್ಕೆ ಕಳುಹಿಸಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡುವ ಅಧಿಕಾರ ಯಾರಿಗೂ ಇಲ್ಲ’ ಎಂದು ಹೇಳಿದರು.
ಪರೀಕ್ಷೆ ಬರೆಯಲು ವ್ಯವಸ್ಥೆ: ‘ಕಲುಷಿತ ಆಹಾರ ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿರುವ ಮೇಘಾಲಯ ರಾಜ್ಯದ 22 ವಿದ್ಯಾರ್ಥಿಗಳು ಹಾಗೂ ಸ್ಥಳೀಯ 14 ವಿದ್ಯಾರ್ಥಿಗಳು ಗುಣಮುಖರಾದ ನಂತರ ಶೈಕ್ಷಣಿಕ ವರ್ಷದ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಸ್ವಸ್ಥಗೊಂಡವರ ಪೈಕಿ 11 ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿದ್ದು, ವೈದ್ಯರ ಸಲಹೆ ಹಾಗೂ ಪೋಷಕರ ಒಪ್ಪಿಗೆ ಪಡೆದು ಪರೀಕ್ಷೆ–1 ಬರೆಯಲಿ ಇಲ್ಲವಾದಲ್ಲಿ ಪರೀಕ್ಷೆ–2 ಬರೆಯಲು ವ್ಯವಸ್ಥೆ ಮಾಡಿ. ಸರ್ಕಾರದ ಆಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಹೊರಗಿನ ವ್ಯಕ್ತಿ ಹಾಗೂ ಸಂಸ್ಥೆಯಿಂದ ಆಹಾರ ಪಡೆಯುವಂತಿಲ್ಲ. ಯಾವುದಾದರೂ ದೂರು ಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.