
ಮಳವಳ್ಳಿ: ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಿದ್ದ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಅವರು ಶೋಷಿತರಿಗೆ ಅಕ್ಷರದ ಬೆಳಕು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಸಮಿತಿಯ ಒಕ್ಕೂಟ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದ ಕಠೋರ ಸಹಿಷ್ಣತೆಯ ನಡುವೆಯೂ ಶೋಷಣೆಗೊಳಗಾದ ಮಹಿಳಾ ಕುಲದ ಸ್ವಾಭಿಮಾನ ಮೌಲ್ಯವನ್ನು ಅಕ್ಷರ ಜ್ಞಾನದ ಮೂಲಕ ಎತ್ತಿಹಿಡಿದ ದಿಟ್ಟ ಮಹಿಳೆ ಸಾವಿತ್ರಿಬಾಯಿ ಫುಲೆ. ಅವರು ಎಲ್ಲರಿಗೂ ಆದರ್ಶನೀಯವಾಗಿದ್ದಾರೆ. ದಲಿತ ಮತ್ತು ಶೋಷಿತ ಸಮುದಾಯದ ಬಾಲಕಿಯರಿಗೆ ಶಾಲೆ ಪ್ರಾರಂಭಿಸಿ, ಶಿಕ್ಷಕಿಯಾದ ಸಾವಿತ್ರಿಬಾಯಿ ಫುಲೆ ಅವರ ಜೀವನ ರೋಚಕವಾದುದು. ಸಮಾಜದ ಬಹಿಷ್ಕಾರ ಹಾಗೂ ಅವಮಾನ ಅನುಭವಿಸಿದರೂ, ಛಲ ಬಿಡದೇ ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ ಸಾವಿತ್ರಿಬಾಯಿಯನ್ನು ಭಾರತೀಯ ಸಮಾಜ ಎಂದೂ ಮರೆಯಬಾರದು ಎಂದು ಹೇಳಿದರು.
ಸಾಧಕರನ್ನು ಅಭಿನಂದಿಸಲಾಯಿತು.
ಸಮಿತಿಯ ಅಧ್ಯಕ್ಷ ಎಂ.ಆರ್.ಪ್ರಸಾದ್, ಮುಖಂಡರಾದ ಎಂ.ಎನ್.ಜಯರಾಜ್, ಬಿ.ಸಿದ್ದಯ್ಯ, ಎಂ.ಸಿದ್ದಯ್ಯ, ಶಂಕರ್, ಸುರೇಶ್, ರಾಚಪ್ಪಾಜಿ ಹಾಗೂ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.