
ಮದ್ದೂರು: ಪಟ್ಟಣದ ಹೊಳೇಬೀದಿಯಲ್ಲಿರುವ ಚಿಕ್ಕ ಸವದತ್ತಿ ಎಂದೇ ಹೆಸರಾಗಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ 54ನೇ ವರ್ಷದ ಜಾತ್ರಾಮಹೋತ್ಸವವು ಭಾನುವಾರ ಸಡಗರ ಸಂಭ್ರಮದಿಂದ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು.
ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ದೇವಿಯ ವಿಗ್ರಹವನ್ನು ವಿಶೇಷ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು, ಹೊಳೇಬೀದಿ, ಪೇಟೆಬೀದಿಯಲ್ಲಿ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿತ್ತು.
ಬೆಳಿಗ್ಗೆ 9ಕ್ಕೆ 27ನೇ ವರ್ಷದ ಚಂಡಿಕಾಯಾಗವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಧ್ಯಾಹ್ನ 12ಕ್ಕೆ ಪೂರ್ಣಹುತಿ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಮಹಿಳೆಯರಿಂದ ತಂಬಿಟ್ಟಿನ ಆರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 1 ರಿಂದ 4 ರವರೆಗೆ ಅನ್ನಸಂತರ್ಪಣೆ ನಡೆಯಿತು.
ಇದರ ಜೊತೆಗೆ 2.30ರಿಂದ ಸಂಜೆ 5.30ರ ವರೆಗೆ ನಿಂಬೆಹಣ್ಣಿನ ದೀಪದ ಆರತಿ ಮತ್ತು ಉಯ್ಯಾಲೋತ್ಸವವನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಪಟ್ಟಣ ಹಾಗೂ ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಅನ್ನಸಂತರ್ಪಣೆಯಲ್ಲಿ ಅವರು ಪಾಲ್ಗೊಂಡಿದ್ದರು.
ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮದರ್ಶಿ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳಾದ ಕಿರಣ್, ಸಂತೋಷ್ , ದೇವರಾಜ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.