ಮಂಡ್ಯ: ‘ಕಾರ್ಮಿಕರು, ರೈತರು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಶ್ರಮ ವಹಿಸುತ್ತಿದ್ದು, ಯೋಜನೆಗಳ ಸದುಪಯೋಗವು ಪರಿಣಾಮಕಾರಿಯಾಗಿ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ನಗರದ ಚಿಕ್ಕ ಮಂಡ್ಯದಲ್ಲಿ ನಿರ್ಮಿಸಿದ ನೂತನ ಕಾರ್ಮಿಕ ಭವನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ನಮ್ಮ ಸರ್ಕಾರವು ಕಾರ್ಮಿಕರು, ರೈತರು ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮವಹಿಸುತ್ತದೆ. ಕಾರ್ಮಿಕ ಮುಖಂಡರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರಿಗೆ ಸರ್ಕಾರ ನೀಡುವ ಯೋಜನೆಗಳ ಕುರಿತು ಮನೆ ಮನೆಗೆ ಮಾಹಿತಿ ನೀಡುವ ಕಾರ್ಯಕೈಗೊಳ್ಳಿ’ ಎಂದು ತಿಳಿಸಿದರು.
‘ಕಾರ್ಮಿಕರಿಗೆ ಅಗತ್ಯ ಮಾಹಿತಿ ಒದಗಿಸುವುದು ಕಾರ್ಮಿಕ ಭವನದ ಮೂಲ ಉದ್ದೇಶವಾಗಿದೆ. ನವಭಾರತ ನಿರ್ಮಾಣಕ್ಕೆ ಕಾರ್ಮಿಕರ ಕೊಡುಗೆ ಅಪಾರವಾಗಿದ್ದು ಕಾರ್ಮಿಕರು ಭವನದ ಸದುಪಯೋಗವನ್ನು ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಮೃತಪಟ್ಟ ಖಾಸಗಿ ವಾಹನ ಚಾಲಕರ ಕುಟುಂಬದವರಿಗೆ ನೀಡುವ ₹ 5 ಲಕ್ಷ ಪರಿಹಾರ ಚೆಕ್ ಹಾಗೂ ವಿದ್ಯಾರ್ಥಿ ವೇತನದ ಚೆಕ್ಗಳನ್ನು ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಕುಮಾರ, ಜಿ.ಪಂ. ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್, ಮುಡಾ ಅಧ್ಯಕ್ಷ ನಯೀಂ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.