
ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗೆ ಶಾಸಕ ಪಿ.ರವಿಕುಮಾರ್ ಅವರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
ನಗರದ ಕಾರೆಮನೆ ಗೇಟ್ ಬಳಿ ಒಂದು ಮತ್ತು ಎರಡನೇ ವಾರ್ಡಿನ ನಿವಾಸಿಗಳಿಗೆ ಅನುಕೂಲವಾಗುವಂತೆ ತಡೆಗೋಡೆ ನಿರ್ಮಾಣ, ರಸ್ತೆ ಕಾಮಗಾರಿ, ತಾಲ್ಲೂಕಿನ ಅರಿಶಿಣಗೆರೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಚಂದಗಾಲು ಗ್ರಾಮದಲ್ಲಿ ಕ್ಷೀರಭವನ ಉದ್ಘಾಟಿಸಿದರು.
ಶಾಸಕ ಪಿ.ರವಿಕುಮಾರ್ ಮಾತನಾಡಿ, ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಬಂದಾಗ ಆಗುತ್ತಿದ್ದ ಅನಾಹುತ ತಪ್ಪಿಸುವ ಉದ್ದೇಶದಿಂದ ಹಾಗೂ ಶಾಶ್ವತ ಪರಿಹಾರಕ್ಕಾಗಿ ಒತ್ತು ನೀಡಲಾಗಿದೆ. ಅದೇ ರೀತಿ ಗ್ರಾಮೀಣ ಭಾಗದ ಮೂಲ ಸೌಲಭ್ಯಕ್ಕೂ ಅನುದಾನ ತರುವ ಮೂಲಕ ಅಭಿವೃದ್ಧಿಗೆ ಮುಂದಾಗಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಗರಸಭೆ, ಕೆಆರ್ಐಡಿಎಲ್ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ನಗರದಲ್ಲಿ ಆರಂಭವಾಗಬೇಕಿರುವ ಕಾಮಗಾರಿಗಳ ಆಡಳಿತ ಅನುಮೋದನೆಯನ್ನು ಪಡೆದುಕೊಂಡು ಆದಷ್ಟು ಬೇಗ ಕಾಮಗಾರಿಗಳನ್ನು ಪ್ರಾರಂಭಿಸುವಂತೆ ಸೂಚನೆ ನೀಡಿದ್ದೇನೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ಮುಖಂಡರಾದ ತ್ಯಾಗರಾಜು, ಚಿಕ್ಕಬಳ್ಳಿ ಕೃಷ್ಣ, ಶಿವರಾಮು, ಪುಟ್ಟಸ್ವಾಮಿ, ನಾಗರಾಜು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.