ADVERTISEMENT

ಮಂಡ್ಯ | ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಭತ್ತ ಬಡಿದು, ರಾಶಿ ಪೂಜೆ ಮಾಡಿ ಬಿಜೆಪಿಯಿಂದ ವಿನೂತನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 4:22 IST
Last Updated 30 ಡಿಸೆಂಬರ್ 2025, 4:22 IST
ಜಿಲ್ಲೆಯಾದ್ಯಂತ ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಭತ್ತ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು
ಜಿಲ್ಲೆಯಾದ್ಯಂತ ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಕಾರ್ಯಕರ್ತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಭತ್ತ ಬಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು   

ಮಂಡ್ಯ:‌ ಜಿಲ್ಲೆಯಾದ್ಯಂತ ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಭತ್ತ ಬಡಿದು, ರಾಶಿ ಪೂಜೆ ಮಾಡುವ ಮೂಲಕ ಸೋಮವಾರ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡು ಕಾರ್ಯಕರ್ತರು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.

ಮಂಡ್ಯ ಜಿಲ್ಲೆಯಲ್ಲಿ ರೈತರು ಅತಿ ಹೆಚ್ಚು ಭತ್ತ ಬೆಳೆದಿದ್ದಾರೆ. ಈಗ ಕಟಾವು ಮುಗಿಯುವ ಹಂತಕ್ಕೆ ಬಂದಿದೆ. ಆದರೆ ಈಗಾಗಲೇ ಕೇಂದ್ರ ಸರ್ಕಾರ ಭತ್ತಕ್ಕೆ ₹2,386 ಬೆಂಬಲ ಬೆಲೆಯನ್ನಾಗಿ ಘೋಷಣೆ ಮಾಡಿದೆ. ರಾಜ್ಯ ಸರ್ಕಾರ ಮಾತ್ರ ಇಲ್ಲಿಯವರೆಗೂ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆದಿಲ್ಲ ಎಂದು ಕಿಡಿಕಾರಿದರು.

ADVERTISEMENT

ಖರೀದಿ ಕೇಂದ್ರ ತೆರೆಯದೆ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿರುವುದು ದುರಂತ. ರೈತರು, ಭತ್ತವನ್ನು ಸಂಗ್ರಹಿಸಿ ಇಟ್ಟುಕೊಳ್ಳಲಾಗದೆ, ಮಧ್ಯವರ್ತಿಗಳಿಗೆ ಮಾರುಕಟ್ಟೆ ಮೌಲ್ಯಕ್ಕಿಂತ ಕಡಿಮೆ ಅಂದರೆ ₹1,800 ಅಥವಾ ₹2,000 ಮಾರಾಟ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ದಲ್ಲಾಳಿಗಳಿಗೆ ಅನುಕೂಲ ಮಾಡಿಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ರಾಜ್ಯ ಕೃಷಿ ಸಚಿವರು, ಮಂಡ್ಯ ಜಿಲ್ಲೆಯವರಾಗಿದ್ದರೂ ಕೂಡ ರೈತರಿಗೆ ಅನುಕೂಲ ಮಾಡಿಕೊಡದೆ ಜಾಣ ಮೌನ ವಹಿಸಿದ್ದಾರೆ. ಜಿಲ್ಲೆಯಲ್ಲಿ ಖರೀದಿ ಕೇಂದ್ರವನ್ನು ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು. ಖರೀದಿ ಕೇಂದ್ರ ತೆರೆಯದೇ ಹೋದರೆ ಮಂಡ್ಯ ಜಿಲ್ಲೆಯಾದ್ಯಂತ ಪ್ರತಿಭಟನೆಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಆರ್.ಅಶೋಕ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ವೈರಿಮುಡಿ, ಪ್ರಧಾನ ಕಾರ್ಯದರ್ಶಿ ಜವರೇಗೌಡ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್‌, ನಗರ ಘಟಕ ಅಧ್ಯಕ್ಷ ವಸಂತ್ ಕುಮಾರ್, ಮುಖಂಡರಾದ ಶಿವಕುಮಾರ್ ಕೆಂಪಯ್ಯ, ಶಿವಕುಮಾರ ಆರಾಧ್ಯ, ವಿವೇಕ್, ಮಹಂತಪ್ಪ, ಆನಂದ ಕೆಂಪಯ್ಯನದೊಡ್ಡಿ, ಭೀಮೇಶ್, ಚಾಮರಾಜು, ಸಿದ್ದರಾಜು, ಮಂಜು, ನಿತ್ಯಾನಂದ, ಕೃಷ್ಣ, ಯೋಗಾನಂದ ಭಾಗವಹಿಸಿದ್ದರು.

ಕೃಷಿ ಸಚಿವರು, ಜಿಲ್ಲಾಡಳಿತದ ವಿರುದ್ಧ ಘೋಷಣೆ ಕ್ವಿಂಟಲ್‌ಗೆ ₹2,386 ಬೆಂಬಲ ಬೆಲೆ ಘೋಷಣೆ  ಭತ್ತದ ಬೆಳೆಗಾರರಿಗೆ ಅನ್ಯಾಯ: ಆರೋಪ 

7 ಖರೀದಿ ಕೇಂದ್ರಗಳಲ್ಲಿ ಪ್ರಕ್ರಿಯೆ ಆರಂಭ: ಡಿಸಿ

ಸರ್ಕಾರವು 2025–26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಆದೇಶಿಸಿದ್ದು ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ಆಹಾರ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ನೋಂದಣಿ ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸಲಾಗುತ್ತಿರುತ್ತದೆ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದ್ದಾರೆ.  ಜಿಲ್ಲೆಯಲ್ಲಿ ಭತ್ತ ಸರಬರಾಜು ಮಾಡಲು 857 ರೈತರು 25994 ಕ್ವಿಂಟಲ್‌ ನೋಂದಣಿ ಮಾಡಿಕೊಂಡಿರುತ್ತಾರೆ. ಭತ್ತ ನೋಂದಣಿ ಕಾರ್ಯ ಡಿ.31ರವರೆಗೆ ಚಾಲ್ತಿಯಲ್ಲಿರುತ್ತದೆ. 7 ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.  ಶ್ರೀರಂಗಪಟ್ಟಣದ ಕೆಎಫ್‌ಸಿಎಸ್‌ಸಿ ಗೋದಾಮು ಆವರಣ ಪಾಂಡವಪುರದ ಎಪಿಎಂಸಿ ಆವರಣ ಮಂಡ್ಯದ ಉಮ್ಮಡಹಳ್ಳಿಯ ರಾಜ್ಯ ಉಗ್ರಾಣ ನಿಗಮ ಮಳವಳ್ಳಿ ಮದ್ದೂರು ನಾಗಮಂಗಲ ಕೆ.ಆರ್‌.ಪೇಟೆಯ ಎಪಿಎಂಸಿ ಆವರಣಗಳಲ್ಲಿ ಖರೀದಿ ಕೇಂದ್ರಗಳಿದ್ದು ಭತ್ತ ಸರಬರಾಜು ಮಾಡಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.