
ಮಂಡ್ಯ: ‘ನಿರುದ್ಯೋಗಿಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಪ್ರಧಾನ ಮಂತ್ರಿ ಉದ್ಯೋಗ ಸೃಜನೆ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಗಳ ಕುರಿತು ಜಿಲ್ಲೆಯ ನಿರುದ್ಯೋಗಿಗಳಿಗೆ ಅರಿವು ಮೂಡಿಸಿ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ ಕಾರ್ಯಕ್ರಮ (ಪಿ.ಎಂ.ಇ.ಜಿ.ಪಿ) ಹಾಗೂ ಪ್ರಧಾನ ಮಂತ್ರಿಗಳ ವಿಶ್ವಕರ್ಮ ಕಾರ್ಯಕ್ರಮಗಳ ಸಂಬಂಧ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯನ್ನು ಪ್ರಸಕ್ತ ವರ್ಷ (2025-26) 102 ಅರ್ಹ ನಿರುದ್ಯೋಗಿಗಳಿಗೆ ತಲುಪಿಸುವ ಗುರಿ ಹೊಂದಿದ್ದು ಈಗಾಗಲೇ 70 ಅರ್ಹ ಫಲಾನುಭವಿಗಳನ್ನು ಗುರುತಿಸಿ ₹4.08 ಕೋಟಿ ಅನುದಾನವನ್ನು ಬ್ಯಾಂಕ್ ಮುಖಾಂತರ ಸಬ್ಸಿಡಿ ದರದಲ್ಲಿ ನೀಡಲಾಗಿದೆ ಎಂದರು.
ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯಡಿ ನಗರ ಪ್ರದೇಶದ ಸಾಮಾನ್ಯ ವರ್ಗದ ನಿರುದ್ಯೋಗಿಗಳು ಉದ್ಯಮ ಪ್ರಾರಂಭಿಸಲು ಶೇ 15 ಮತ್ತು ಪರಿಶಿಷ್ಟ ವರ್ಗದವರಿಗೆ ಶೇ 25ರಷ್ಟು ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ನಿರುದ್ಯೋಗಿಗಳು ಉದ್ಯಮ ಪ್ರಾರಂಭಿಸಲು ಶೇ 25 ಮತ್ತು ಪರಿಶಿಷ್ಟ ವರ್ಗದವರಿಗೆ ಶೇ 35ರಷ್ಟು ಸಬ್ಸಿಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.
ವಿವಿಧ ಯೋಜನೆಗಳ ಮೂಲಕ ಉದ್ಯಮ ಪ್ರಾರಂಭಿಸಲು ಇಚ್ಛೆಪಟ್ಟ ಅಭ್ಯರ್ಥಿಗಳ ಹಾಗೂ ಉದ್ಯಮ ಪ್ರಾರಂಭಿಸಲು ಇಚ್ಚಿಸುವ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಅವರಿಗೆ ಈ ಯೋಜನೆಯ ಬಳಕೆಯ ಕುರಿತು ವಿಶೇಷ ಕಾರ್ಯಗಾರ ಏರ್ಪಡಿಸಿ. ಈ ಯೋಜನೆಯಲ್ಲಿ ಉತ್ಪಾದನಾ ಚಟುವಟಿಕೆ ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಗರಿಷ್ಠ ₹50 ಲಕ್ಷ ಹಾಗೂ ಸೇವಾ ಚಟುವಟಿಕೆಯಲ್ಲಿ ಉದ್ಯಮ ಪ್ರಾರಂಭಿಸುವ ಅಭ್ಯರ್ಥಿಗಳಿಗೆ ಗರಿಷ್ಠ ₹20 ಲಕ್ಷದವರೆಗೂ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ದಿನೇಶ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ನಾಗಾನಂದ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಪಾಲ್ಗೊಂಡಿದ್ದರು.
ವಿಶ್ವಕರ್ಮಯೋಜನೆ: 9,600 ಮಂದಿಗೆ ಟೂಲ್ ಕಿಟ್
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಈಗಾಗಲೇ ಜಿಲ್ಲೆಯಲ್ಲಿ 19 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ತರಬೇತಿ ಪಡೆದಿದ್ದು ಅದರಲ್ಲಿ 9600 ಜನರಿಗೆ ₹15000 ಸಾವಿರ ಮೌಲ್ಯದ ಟೂಲ್ ಕಿಟ್ ವಿತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಹೂ ಕಟ್ಟುವುದು. ಟೈಲರಿಂಗ್ ಬುಟ್ಟಿ ಹೆಣೆಯುವುದು ಸೇರಿ ವಿವಿಧ ಸಾಂಪ್ರದಾಯಿಕ ವ್ಯಾಪಾರಿಗಳಿಗೆ ಬೇಡಿಕೆ ಇದೆ. ಈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ₹1 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಸದರಿ ಯೋಜನೆ ಅಡಿ ಶಿಲ್ಪಿಗಳಿಗೂ ಹೆಚ್ಚಿನ ಉತ್ತೇಜನ ನೀಡಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.