ಶ್ರೀರಂಗಪಟ್ಟಣ: ತಾಲ್ಲೂಕಿನ ಪಾಲಹಳ್ಳಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾನುವಾರ (ಅ.20) ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಪೈ. ಮುಕುಂದ ಶನಿವಾರ ತಿಳಿಸಿದರು.
‘ಮಧ್ಯಾಹ್ನ 3 ಗಂಟೆಗೆ ಪಾಲಹಳ್ಳಿಯ ಅರಳಿ ಮರ ವೃತ್ತಕ್ಕೆ ಕುಮಾರಸ್ವಾಮಿ ಆಗಮಿಸಲಿದ್ದಾರೆ. ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ಬಿಜೆಪಿ ಮುಖಂಡ ಇಂಡುವಾಳು ಸಚ್ಚಿದಾನಂದ ಇತರ ಪ್ರಮುಖರು ಕೂಡ ಬರಲಿದ್ದಾರೆ’ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸನ್ಮಾನಿಸಲಾಗುತ್ತದೆ’ ಎಂದು ಅವರು ಹೇಳಿದರು.
ಜೆಡಿಎಸ್ ಮುಖಂಡ ಪಿ.ಎಚ್. ಚಂದ್ರಶೇಖರ್ ಮಾತನಾಡಿ, ‘ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘವು ನಬಾರ್ಡ್ ನೆರವಿನಿಂದ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಭವನದ ಉದ್ಘಾಟನೆ ಅ.21ರಂದು ನಡೆಯಲಿದ್ದು, ಕಾರ್ಯಕ್ರಮಕ್ಕೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿತ್ತು. ಅಂದು ಅವರು ದೆಹಲಿಗೆ ತೆರಳುವ ಕಾರಣ ಒಂದು ದಿನ ಮುಂಚಿತವಾಗಿ, ಪಾಲಹಳ್ಳಿಗೆ ಭೇಟಿ ನೀಡುತ್ತಿದ್ದಾರೆ’ ಎಂದು ತಿಳಿಸಿದರು.
ಮುಖಂಡರಾದ ರಾಮಚಂದ್ರು, ಟೆಂಪೋ ಪ್ರಕಾಶ್, ಬಸ್ ಕೃಷ್ಣಪ್ಪ, ಸಂಜೀವಮೂರ್ತಿ ಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.