ADVERTISEMENT

ಮಂಡ್ಯ | ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ: ಜಿಲ್ಲಾಧಿಕಾರಿ

ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ರೇಬಿಸಿ ಲಸಿಕೆ ಕಾರ್ಯಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕುಮಾರ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 4:23 IST
Last Updated 19 ನವೆಂಬರ್ 2025, 4:23 IST
ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು 
ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಂಬಂಧ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಕುಮಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು    

ಮಂಡ್ಯ: ‘ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಂಡು ನಗರ ಸ್ಥಳೀಯ ಸಂಸ್ಥೆಗಳು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮತ್ತು ರೇಬಿಸ್‌ ಲಸಿಕೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಪ್ರೀಂಕೋರ್ಟ್‌ ಬೀದಿ ನಾಯಿಗಳ ಹಾವಳಿ ಮತ್ತು ಬೀದಿ ನಾಯಿಗಳ ನಿರ್ವಹಣೆ ಸಂಬಂಧ ಸಭೆ ನಡೆಸಿದ ಅವರು, ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶದಂತೆ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಹಾಗೂ ಬೀದಿ ನಾಯಿಗಳ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂದರು. 

ಬೀದಿ ನಾಯಿಗಳ ನಿಯಂತ್ರಣ, ಪ್ರಾಣಿಗಳ ಕಲ್ಯಾಣ ಹಾಗೂ ನಾಗರಿಕರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆದ್ಯತೆಯ ಮೇರೆಗೆ ಶಾಲಾ-ಕಾಲೇಜುಗಳ ಆವರಣ, ಆಸ್ಪತ್ರೆ, ಸರ್ಕಾರಿ ಕಚೇರಿಗಳ ಆವರಣ, ರೈಲ್ವೆ ನಿಲ್ದಾಣ ಹಾಗೂ ಆಟದ ಮೈದಾನಗಳಲ್ಲಿನ ಬೀದಿ ನಾಯಿಗಳ ಮಾಹಿತಿ ಕಲೆ ಹಾಕುವಂತೆ ನಿರ್ದೇಶನ ನೀಡಿದರು.

ADVERTISEMENT

ಈ ಕಾರ್ಯವನ್ನು ಆರೋಗ್ಯ, ಶಿಕ್ಷಣ, ಸಾರಿಗೆ, ಯೋಜನೆ ಹಾಗೂ ರೈಲ್ವೆ ಇಲಾಖೆಗಳು ಸಮನ್ವಯ ಸಾಧಿಸಿ, ಯಾವುದೇ ಸಮಸ್ಯೆಗಳಾಗದಂತೆ ಗಮನಹರಿಸಬೇಕು. ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಮತ್ತು ಆರೈಕೆಗೆ ಸೂಕ್ತವಾದ ಸ್ಥಳವನ್ನು ಗುರುತಿಸಬೇಕು. ಈ ಪ್ರಕ್ರಿಯೆಯನ್ನು ಇಲಾಖೆಯ ಸಮನ್ವಯ ಹಾಗೂ ಸಹಕಾರದೊಂದಿಗೆ ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದರು. 

ಪ್ರಾಣಿ ಕಲ್ಯಾಣ ಸಂಸ್ಥೆಗಳು ಹಾಗೂ ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಉದ್ದೇಶಿತ ಸ್ಥಳಾಂತರ ಮಾಡಲಾಗುವ ಬೀದಿ ನಾಯಿಗಳ ಆಶ್ರಯ ತಾಣಗಳ ನಿರ್ವಹಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬೀದಿ ನಾಯಿಗಳ ನಿರ್ವಹಣೆ ಮತ್ತು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಕಾರ್ಯಗಳಲ್ಲಿ ಸುಪ್ರೀಂ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು. 

ಕ್ರೀಡಾಂಗಣಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ದಿನದ 24 ಗಂಟೆ ನಿಯೋಜಿಸಿ ಬೀದಿ ನಾಯಿಗಳು ಒಳ ನುಸುಳದಂತೆ ಕ್ರಮವಹಿಸಬೇಕು. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ರೇಬಿಸ್ ಕುರಿತು ಅರಿವು ಮೂಡಿಸಬೇಕು. ಬೀದಿನಾಯಿ ಮತ್ತು ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಮೂಡ ಆಯುಕ್ ಕೃಷ್ಣ ಕುಮಾರ್, ಮಂಡ್ಯ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನರಸಿಂಹ ಮೂರ್ತಿ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಶಿವಲಿಂಗಯ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

‘ಉಚಿತ ಸಹಾಯವಾಣಿ ಸ್ಥಾಪಿಸಿ’

ಬೀದಿನಾಯಿ ಹಾವಳಿ ಹಾಗೂ ದೂರುಗಳ ಸಂಬಂಧ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಸಹಾಯವಾಣಿ ಸ್ಧಾಪಿಸುವುದು ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡೆಲ್ ಅಧಿಕಾರಿಯನ್ನು ನೇಮಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.  ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕಿದ್ದು ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.