ಮಂಡ್ಯ: ವಿಶ್ವವಿಖ್ಯಾತ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದಲ್ಲಿ ಏ.7ರಂದು ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಏ.2ರಿಂದ ವೈರಮುಡಿ ಬ್ರಹೋತ್ಸವ ಪ್ರಾರಂಭವಾಗಿದ್ದು, ಏ.14 ರವರೆಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೆರವೇರಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈರಮುಡಿ ಬ್ರಹ್ಮೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಮೇಲುಕೋಟೆಗೆ ಸಂಪರ್ಕ ಕಲ್ಪಿಸುವ ಪಟ್ಟಣ ಹಾಗೂ ನಗರ ಭಾಗಗಳಿಂದ ಸುಮಾರು 40 ಬಸ್ಗಳ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ಹಿರಿಯ ನಾಗರಿಕರು ಹಾಗೂ ಗರ್ಭಿಣಿಯರಿಗೆ ಪಾರ್ಕಿಂಗ್ ಸ್ಥಳದಿಂದ ದೇವಾಲಯದವರೆಗೆ ಓಡಾಡಲು 10 ಉಚಿತ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಈ ಮೊದಲು ಮೇಲುಕೋಟೆ ಉತ್ಸವದ ಸಂದರ್ಭದಲ್ಲಿ ಬಾಡಿಗೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿತ್ತು. ಪ್ರಸಕ್ತ ಸಾಲಿನಿಂದ ಮೇಲುಕೋಟೆ ಸುತ್ತಮುತ್ತ ಶಾಶ್ವತವಾಗಿ ₹19 ಲಕ್ಷ ವೆಚ್ಚದಲ್ಲಿ 40 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ವಿವರಿಸಿದರು.
ದಾಸೋಹ ವ್ಯವಸ್ಥೆ:
ದೇವಾಲಯದ ವತಿಯಿಂದ ಇದೇ ಪ್ರಥಮ ಬಾರಿಗೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ದೇವಾಲಯಕ್ಕೆ ಸೇರಿದ ದಾಸೋಹ ಭವನದಲ್ಲಿ ವೈರಮುಡಿ ರಥೋತ್ಸವ ನಡೆಯುವ ಏ.7 ಬೆಳಿಗ್ಗೆ 8 ರಿಂದ ಏ.8ರ ಬೆಳಿಗ್ಗೆ 8 ಗಂಟೆಯವರೆಗೆ ನಿರಂತರವಾಗಿ ಭಕ್ತರಿಗೆ ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಳೆದ ಬಾರಿಯಂತೆ ಈ ವರ್ಷವೂ ಸಹ ಕ್ಷೇತ್ರದಲ್ಲಿ ವಿಶೇಷ ದೀಪಾಲಂಕಾರ ಮತ್ತು ಹೂವಿನ ಅಲಂಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಡಿಸಿ ಬಿ.ಸಿ. ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ರೆಡ್ಕ್ರಾಸ್ ಸಂಸ್ಥೆ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಹಾಗೂ ಹರ್ಷ ಪಣ್ಣೆದೊಡ್ಡಿ ಹಾಜರಿದ್ದರು.
1096 ಸಿಬ್ಬಂದಿಯಿಂದ ಬಂದೋಬಸ್ತ್
ಧಾರ್ಮಿಕ ಕ್ಷೇತ್ರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇಲುಕೋಟೆ ವೈರಮುಡಿ ಉತ್ಸವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. 5 ಡಿವೈಎಸ್ಪಿ 34 ಸಿಪಿಐ 79 ಪಿಎಸ್ಐ 128 ಎ.ಎಸ್.ಐ 664 ಹೆಡ್ ಕಾನ್ಸ್ಟೆಬಲ್ ಹಾಗೂ ಪೊಲೀಸ್ ಕಾನ್ಸ್ಟೆಬಲ್ 86 ಮಹಿಳಾ ಪೊಲೀಸ್ ಸಿಬ್ಬಂದಿ 100 ಗೃಹರಕ್ಷಕ ದಳ ಸಿಬ್ಬಂದಿ ಸೇರಿ ಒಟ್ಟು 1096 ಸಿಬ್ಬಂದಿಗಳನ್ನು ಬಿಗಿ ಬಂದೋಬಸ್ತ್ಗೆ ನಿಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.
ಏ.11ರಂದು ತೆಪ್ಪೋತ್ಸವ
ಏ.7ರಂದು ಬೆಳಿಗ್ಗೆ 7 ಗಂಟೆಗೆ ಮುಡಿಪೆಟ್ಟಿಗೆಗಳನ್ನು ಜಿಲ್ಲಾ ಖಜಾನೆಯಿಂದ ಮೇಲುಕೋಟೆಗೆ ತೆಗೆದುಕೊಂಡು ಹೋಗಲಾಗುವುದು. ಎಲ್ಲಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ರಾತ್ರಿ 8 ಗಂಟೆಗೆ ವೈರಮುಡಿ ಬ್ರಹ್ಮೋತ್ಸವ ಪ್ರಾರಂಭವಾಗುವುದು ಎಂದು ಸಚಿವರು ಹೇಳಿದರು. ವೈರಮುಡಿ ಬ್ರಹ್ಮೋತ್ಸವ ಅಂಗವಾಗಿ ಮೇಲುಕೋಟೆಯ ದೊಡ್ಡ ಕಲ್ಯಾಣಿಯಲ್ಲಿ ಏ.11ರಂದು ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ. ಕಲ್ಯಾಣಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಿಸಲಾಗಿದ್ದು ಕಲ್ಯಾಣಿಯ ವಿವಿಧ ವೇದಿಕೆಗಳಲ್ಲಿ ಮ್ಯಾಂಡಲಿನ್ ವಾದನ ಓಕಲ್ ಭರತ ನಾಟ್ಯ ಚಂಡೆ ಮದ್ದಳೆ ಮತ್ತು ನಾದಸ್ವರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.