ಶ್ರೀರಂಗಪಟ್ಟಣ: ‘ಮಾನಸಿಕ ಆರೋಗ್ಯ ಹೊಂದುವುದು ಕೂಡ ಮಾನವ ಜನಾಂಗದ ಮೂಲಭೂತ ಹಕ್ಕು’ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ. ಹರೀಶಕುಮಾರ್ ತಿಳಿಸಿದರು.
ಪಟ್ಟಣದ ಕೊರುನ್ ಇಂಡಿಯಾ ಗಾರ್ಮೆಂಟ್ಸ್ನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿಯ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘2013ರಿಂದ ಪ್ರತಿ ವರ್ಷ ಅ.10ರಂದು ವಿಶ್ವದಾದ್ಯಂತ ವಿಶ್ವ ಮಾನಸಿಕ ದಿನಾಚರಣೆ ನಡೆಯುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಹಾಗೂ ವಿಶ್ವ ಮಾನಸಿಕ ಆರೋಗ್ಯ ಫೆಡರೇಷನ್ ಈ ಕಾರ್ಯಕ್ರಮ ನಡೆಸುತ್ತಿದ್ದು, ಜನರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ದೈಹಿಕ ಆರೋಗ್ಯಕ್ಕೆ ನೀಡುವಷ್ಟೇ ಆದ್ಯತೆಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕು’ ಎಂದು ಅವರು ಸಲಹೆ ನೀಡಿದರು.
ಮನೋ ಚಿಕಿತ್ಸಕ ಮಹಮದ್ ಸುಹೇಲ್, ಮಾನಸಿಕ ಕಾಯಿಲೆಗಳ ಲಕ್ಷಣಗಳು ಮತ್ತು ಚಿಕಿತ್ಸೆ ಕುರಿತು ಮಾತನಾಡಿ, ‘ಮಾನಸಿಕ ಸಮಸ್ಯೆಯಿಂದ ಬಳಲುವವರು ಟೆಲಿ ಮನಸ 14416 ಸಹಾಯ ವಾಣಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು’ ಎಂದು ತಿಳಿಸಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಬಿ.ಆರ್. ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಎನ್. ಮರೀಗೌಡ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ, ಕೊರುನ್ ಇಂಡಿಯಾ ಗಾರ್ಮೆಂಟ್ಸ್ನ ವ್ಯವಸ್ಥಾಪಕ ಸುಭಾಷ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ. ಮೋಹನ್, ರಾಜು, ಜಿ.ಬಿ. ಹೇಮಣ್ಣ, ಸಾಂಕ್ರಾಮಿಕ ರೋಗ ತಜ್ಞೆ ಡಾ. ಮೇಘನಾ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದನ್, ಕೃಷ್ಣೇಗೌಡ, ಫಣೀಂದ್ರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.