ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಹೆಸರಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ₹5 ಲಕ್ಷದ ದತ್ತಿನಿಧಿ ಸ್ಥಾಪಿಸಿದ್ದಾರೆ. ಎಸ್ಎಂಕೆ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದು ಹಾಗೂ ಇತರ ಸಮಾಜಮುಖಿ ಕಾರ್ಯಕ್ರಮಗಳಿಗಾಗಿ ದತ್ತಿ ಹಣದ ಬಡ್ಡಿ ಬಳಕೆಗೆ ಸಮ್ಮತಿಸಿದ್ದಾರೆ.
ನಗರದ ಕರ್ನಾಟಕ ಸಂಘದ ಕೆವಿಎಸ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಆಪ್ತರಾದ ಮಂಡ್ಯ ತಾ.ಪಂ. ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕಾಂಗ್ರೆಸ್ ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ ಅವರು ಸಚಿವರು ನೀಡಿದ ₹5 ಲಕ್ಷ ಮೊತ್ತದ ಡಿಡಿಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಹಸ್ತಾಂತರಿಸಿದರು.
ಚಲುವರಾಯಸ್ವಾಮಿ ಅವರ ಕಾರ್ಯವೈಖರಿ ಮತ್ತು ನಿಲುವಿನ ಬಗ್ಗೆ ಮೆಚ್ಚುಗೆ ಸೂಚಿಸಿದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ. ಜಯಪ್ರಕಾಶಗೌಡ ಅವರು ‘ಸಚಿವರು ನೀಡಿದ ಹಣವನ್ನು ಠೇವಣಿ ಇಟ್ಟು ಅದರಿಂದ ಬರುವ ಬಡ್ಡಿ ಹಣವನ್ನು ಎಸ್ಎಂಕೆ ಸಮಾಜಮುಖಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು’ ಎಂದು ತಿಳಿಸಿದರು.
ಕರ್ನಾಟಕ ಸಂಘದಿಂದ ಈಗಾಗಲೇ ₹1 ಲಕ್ಷ ಮೊತ್ತದ ನಾನಾ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ಅದೇ ರೀತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ₹1 ಲಕ್ಷ ನಗದು ಸಹಿತ ಪ್ರಶಸ್ತಿ ಸ್ಥಾಪಿಸಲು ನಿರ್ಧರಿಸಲಾಗಿದೆ. ಅದಕ್ಕೆ ಈಗ ಸಚಿವ ಚಲುವರಾಯಸ್ವಾಮಿ ಅವರು ನೀಡಿರುವ ದತ್ತಿನಿಧಿ ಹಣವನ್ನು ಬಳಸಿಕೊಳ್ಳಲಾಗುವುದು. ಇದರೊಂದಿಗೆ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರು ಈಗಾಗಲೇ ₹2 ಲಕ್ಷ ನೀಡಿದ್ದಾರೆ. ಒಟ್ಟಾರೆ ₹10 ಲಕ್ಷದಿಂದ 15 ಲಕ್ಷ ಠೇವಣಿಯನ್ನು ದತ್ತಿನಿಧಿಯಾಗಿ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಪ್ರೊ.ಜಿ.ಟಿ. ವೀರಪ್ಪ, ಕರ್ನಾಟಕ ಸಂಘದ ಪದಾಧಿಕಾರಿಗಳಾದ ಎಂ.ಕೆ. ಹರೀಶ್ಕುಮಾರ್, ಕೋಣನಹಳ್ಳಿ ಜಯರಾಮ್, ಹನಕೆರೆ ನಾಗಪ್ಪ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.