ADVERTISEMENT

ಅಧಿಕಾರಿಗಳು ಪಟ್ಟಣದಲ್ಲೇ ವಾಸ್ತವ್ಯ ಹೊಂದಿ: ಶಾಸಕ ನರೇಂದ್ರಸ್ವಾಮಿ ಸೂಚನೆ

ಬೇಸಿಗೆಗೆ ಸಮಸ್ಯೆ ಕಾಡದಂತೆ ಜಾಗೃತಿ ವಹಿಸಲು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 2:53 IST
Last Updated 22 ಫೆಬ್ರುವರಿ 2026, 2:53 IST
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು 
ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗಿಯಾಗಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳು    

ಮಳವಳ್ಳಿ: ಅಧಿಕಾರಿಗಳು ಸರ್ಕಾರ ಹಾಗೂ ಜನರ ನಡುವಿನ ಸೇತುವೆಯಾಗಿರುವ ಕೆಲಸ ಮಾಡುವ ಮೂಲಕ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

‘ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳಷ್ಟೇ ಅಧಿಕಾರಿಗಳಿಗೂ ಜಬಾವ್ದಾರಿ ಇದೆ. ಹಲವು ಇಲಾಖೆಗಳ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದ್ದು, ಬದ್ಧತೆಯಿಂದ ಮಾಡಲು ಸಾಧ್ಯವಾಗದಿದ್ದರೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿಕೊಳ್ಳುವೆ’ ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಬಹುತೇಕ ಅಧಿಕಾರಿಗಳು ಮೈಸೂರು ಸೇರಿದಂತೆ ಬೇರೆಡೆ ವಾಸವಿದ್ದು, ಕೆಲ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿ ಬಾರದ ಹಾಗೂ ದೂರವಾಣಿ ಸ್ವೀಕರಿಸದ ಬಗ್ಗೆಯೂ ದೂರುಗಳಿವೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಎಲ್ಲ ಅಧಿಕಾರಿಗಳು ಪಟ್ಟಣದಲ್ಲಿಯೇ ವಾಸವಿರುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ವಂದಿಸಬೇಕು. ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗದಿರುವ ಅಧಿಕಾರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದು ಹೇಳಿದರು.

‘ಪಟ್ಟಣದಲ್ಲಿ ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ದೂರುಗಳಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆಯಾದರೂ ಜನರಿಗೆ ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿಲ್ಲ’ ಎಂದು ಪುರಸಭೆ ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

‘ಗ್ರಾಮೀಣ ಪ್ರದೇಶದಲ್ಲಿ ಪೆಟ್ಟಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟವಾಗದಂತೆ ಅಬಕಾರಿ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು.  ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು. ಕಾನೂನು ವ್ಯಾಪ್ತಿಯನ್ನು ಮೀರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ಸೌಲಭ್ಯವನ್ನು ಒದಗಿಸಬೇಕು. ಹೆಚ್ಚುವರಿ ಬಸ್ ನೀಡುವಂತೆ ಸಚಿವರಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದರು.

ಪರೀಕ್ಷೆಗಳು ಬರುತ್ತಿರುವುದರಿಂದ ವಿದ್ಯಾರ್ಥಿ ನಿಲಯದಲ್ಲಿ ಊಟ ಹಾಗೂ ಮೂಲಸೌಲಭ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ನಿಲಯದ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸವಲತ್ತಿನ ಬಗ್ಗೆ ತಹಶೀಲ್ದಾರ್. ತಾ.ಪಂ.ಇಒ ಅವರು ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಬಜೆಟ್‌ನಲ್ಲಿ ಘೋಷಣೆಗೆ ಸಿದ್ಧತೆ

ತಾಲ್ಲೂಕಿನ ಶಿವನಸಮುದ್ರ ಬಳಿಯ ಗಗನಚುಕ್ಕಿ ಜಲಪಾತದ ಬಳಿ ಅಕ್ವಾ ಪಾರ್ಕ್ ನಿರ್ಮಾಣ ಸಂಬಂಧ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಶೀಘ್ರ ಸರ್ವೆ ನಡೆಸಿ ಕೂಡಲೇ ವರದಿ ನೀಡಬೇಕು. ಈ ಬಾರಿಯ ಬಜೆಟ್ ನಲ್ಲಿ ಅದನ್ನು ಘೋಷಣೆ ಮಾಡಿಸಲು ಅನುಕೂಲವಾಗುವಂತೆ ನಾಲಾ ಆಧುನೀಕರಣ ಕಾರ್ಯ ತ್ವರಿತವಾಗಿ ಮುಗಿಸಬೇಕಾಗಿರುವುದರಿಂದ ಇತರೆ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಬೇಸಿಗೆಯ ವೇಳೆಗೆ ಕುಡಿಯುವ ನೀರು ಸೇರಿದಂತೆ ಆರೋಗ್ಯ ಸಂಬಂಧಿಸಿದ ಸಮಸ್ಯೆಗಳು ಕಾಡದಂತೆ ಜಾಗೃತಿ ವಹಿಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೂಚಿಸಿದರು.

ಕಾಡು ಪ್ರಾಣಿಗಳಿಂದ ನಷ್ಟಕೊಳಗಾದ ರೈತರಿಗೆ ಶೀಘ್ರದಲ್ಲಿಯೇ ಪರಿಹಾರ ನೀಡಬೇಕು. ತುಂಡು ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವ ರೈತರಿಗೆ ತೊಂದರೆ ನೀಡಬಾರದು. ಚಿರತೆ ಹಾಗೂ ಆನೆಗಳ ದಾಳಿಗಳನ್ನು ನಿಯಂತ್ರಿಸಬೇಕು. ಕೆರೆ ಕಟ್ಟೆಗಳಲ್ಲಿ ನೀರು ಇರುವಂತೆ ನೋಡಿಕೊಳ್ಳಬೇಕು. ವಿದ್ಯುತ್ ಸಮಸ್ಯೆಬಾರದ ರೀತಿಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ವರದಿ ನೀಡಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.