ADVERTISEMENT

ಹೆದ್ದಾರಿ ಕಾಮಗಾರಿ ಸ್ಥಗಿತಕ್ಕೆ ತಾಕೀತು: ದೂರು ನೀಡಲು ಶಾಸಕ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2024, 3:55 IST
Last Updated 27 ಅಕ್ಟೋಬರ್ 2024, 3:55 IST
ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಮಳವಳ್ಳಿ ಪಟ್ಟಣದ ಕನಕಪುರ ರಸ್ತೆಯಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತರಾಟೆಗೆ ತೆಗೆದುಕೊಂಡರು.   

ಮಳವಳ್ಳಿ: ಪಟ್ಟಣದ ಕನಕಪುರ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ-209ರ ವಿಸ್ತರಣೆಯ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಹಿರಿಯ ಅಧಿಕಾರಿ ಚರ್ಚಿಸುವ ವರೆಗೆ ಕಾಮಗಾರಿ ನಿಲ್ಲಿಸಿ’ ಎಂದು ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಶಾಸಕ ಪಿ.ಎಂ.ನರೇಂದ್ರಸ್ವಾಮಿ  ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕಾಮಗಾರಿ ಸ್ಥಳದಲ್ಲಿದ್ದ ಎಂಜಿನಿಯರ್‌ರಿಂದ ಮಾಹಿತಿ ಪಡೆದ ಶಾಸಕರು, ಕುಡಿಯುವ ನೀರು, ಒಳ ಚರಂಡಿ ಪೈಪ್‌ಗಳು, ವಿದ್ಯುತ್ ಕಂಬ ಸ್ಥಳಾಂತರ ಮಾಡದೆ ಒಡೆದು ಹಾಕಿರುವುದನ್ನು ನೋಡಿ ಅಧಿಕಾರಿ ವಿರುದ್ಧ ಕೆಂಡಾಮಂಡಲರಾದರು. ರಸ್ತೆ ಸಮೀಪವೇ ಒಳಚರಂಡಿ ಮ್ಯಾನ್ ಹೋಲ್, ಕುಡಿಯುವ ನೀರಿನ ಪೈಪ್‌ಗಳು ಹೋಗಿದ್ದರೂ ಕಾಮಗಾರಿ ಮುಂದುವರಿಸಿರುವುದು ಸರಿಯಲ್ಲ, ಟೋಲ್ ಹಣ ಸಂಗ್ರಹಕ್ಕಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಕಿಡಿ ಕಾರಿದರು.

ಮ್ಯಾನ್ ಹೋಲ್ ಹಾಗೂ ಕುಡಿಯುವ ನೀರಿನ ಪೈಪ್‌ಗಳು ಒಡೆದ ಬಗ್ಗೆ  ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುವಂತೆ ಶಾಸಕರು ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಅವರಿಗೆ ಸೂಚಿಸಿದರು.

ADVERTISEMENT

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ಅವೈಜ್ಞಾನಿಕತೆಯಿಂದ ಕೂಡಿದ್ದು,  ಮಳೆ ನೀರಿನ ಜತೆಗೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿದೆ. ಒಳಚರಂಡಿ ಪೈಪ್‌ಗಳು ಒಡೆದಿವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತಿಗೆ ಕ್ಯಾರೇ ಎನ್ನುವುದಿಲ್ಲ ಎಂದು ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ಉಪಾಧ್ಯಕ್ಷ ಎನ್.ಬಸವರಾಜು ಶಾಸಕರಿಗೆ ದೂರು ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಶಾಸಕರು,‘ರಸ್ತೆ ಬದಿಯ ಚರಂಡಿಗೆ ಅಡ್ಡಲಾಗಿ ಒಳಚರಂಡಿ ಮ್ಯಾನ್‌ಹೋಲ್, ಕುಡಿಯುವ ನೀರಿನ ಪೈಪ್, ವಿದ್ಯುತ್ ತಂತಿಗಳ ಕಂಬಗಳು ಇದ್ದು, ಅವುಗಳನ್ನು ತೆರವುಗೊಳಿಸದೆ, ಗುತ್ತಿಗೆದಾರ ಹಾಗೂ ಅಧಿಕಾರಿಗಳು ಕಾಮಗಾರಿ ಮುಂದುವರಿಸಿದ್ದಾರೆ’ ಎಂದು ತರಾಟೆ ತೆಗೆದುಕೊಂಡರು.

ಪಟ್ಟಣದಲ್ಲಿ ಡಬಲ್ ರಸ್ತೆ ನಿರ್ಮಿಸಬೇಕು ಎನ್ನುವ ನಿಯಮವಿದ್ದರೂ ಅದನ್ನು ಪಾಲಿಸಿಲ್ಲ,  ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಕೂಡಲೇ ಮಳವಳ್ಳಿಗೆ ಬಂದು ಕಾಮಗಾರಿಯನ್ನು ಖುದ್ದಾಗಿ ಪರಿಶೀಲಿಸಿ ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಲೋಪಗಳನ್ನು ಸರಿಪಡಿಸಬೇಕು. ಅಲ್ಲಿಯವರೆಗೆ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದರು.

ಬುಧವಾರ ಭೇಟಿ ಮಾಡುವುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ದೂರವಾಣಿ ಮೂಲಕ ತಿಳಿಸಿದ್ದಾರೆ ಎಂದು ಶಾಸಕ ನರೇಂದ್ರ ಸ್ವಾಮಿ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ, ಮುಖಂಡರಾದ ಬಸವರಾಜು, ಕಿರಣ್ ಶಂಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.