
ಶ್ರೀರಂಗಪಟ್ಟಣ: ‘ಮಹಿಳೆಯರು ಅಡುಗೆ ಮನೆಗೆ ಸೀಮಿತರಾಗದೆ ಸಮಾಜದ ಮುಖ್ಯ ವಾಹಿನಿಗೆ ಸೇರಿ ಸಾಧನೆಯ ಪಥದಲ್ಲಿ ಹೆಜ್ಜೆ ಹಾಕಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಸಲಹೆ ನೀಡಿದರು.
ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ, ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಮಹಿಳಾ ಸಂಜೀವಿನಿ ಭವನವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಪುರುಷರಿಗೆ ಸಿಗುವಷ್ಟೇ ಅವಕಾಶಗಳು ಮಹಿಳೆಯರಿಗೂ ಇವೆ. ಉದ್ಯಮ, ಶಿಕ್ಷಣ, ವಿಜ್ಞಾನ, ಆರೋಗ್ಯ, ರಾಜಕೀಯ, ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಮಹಿಳೆಯರು ಅನನ್ಯ ಸಾಧನೆ ಮಾಡುತ್ತಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಕೂಡ ಛಾಪು ಮೂಡಿಸುತ್ತಿದ್ದಾರೆ. ಮಹಿಳಾ ಸಂಘಗಳಿಗೆ ಸರ್ಕಾರದಿಂದ ಸಹಾಯ ಧನ, ಬ್ಯಾಂಕ್ಗಳಿಂದ ಸಾಲ ಸೌಲಭ್ಯ ಕೂಡ ಸಿಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.
‘ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಡ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆ ವರದಾನವಾಗಿದೆ. ಈ ಜನಪರ ಯೋಜನೆಗಳಿಂದ ಆಹಾರ ಇತರ ಸಮಸ್ಯೆಗಳು ಕಡಿಮೆಯಾಗಿವೆ’ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ವೇಣು ಮಾತನಾಡಿ, ‘ಮಹಿಳಾ ಸಂಘಗಳ ಸದಸ್ಯರು ಸಭೆ, ಸಮಾರಂಭ ನಡೆಸಲು ಅನುಕೂಲ ಆಗಲೆಂದು ಗ್ರಾ.ಪಂ. ಮಟ್ಟದಲ್ಲಿ ಸಂಜೀವಿನಿ ಭವನಗಳನ್ನು ನಿರ್ಮಿಸಲಾಗುತ್ತಿದೆ. ಸ್ತ್ರೀಶಕ್ತಿ ಸಂಘಗಳು ಆರ್ಥಿಕ ಶಿಸ್ತು ರೂಢಿಸಿಕೊಳ್ಳಬೇಕು. ಕಿರು ಉದ್ಯಮ ಆರಂಭಿಸಬೇಕು. ಬೇಡಿಕೆ ಇರುವ ಗೃಹೋಪಯೋಗಿ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡಿದರೆ ಆರ್ಥಿಕವಾಗಿ ಸಬಲತೆ ಸಾಧಿಸಬಹುದು’ ಎಂದು ತಿಳಿಸಿದರು.
ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಮಂಜುನಾಥ್, ಅಭಿವೃದ್ಧಿ ಅಧಿಕಾರಿ ಮೃತ್ಯುಂಜಯ, ಎ.ಎಸ್. ಬಂಡಿಸಿದ್ದೇಗೌಡ ಪ್ರತಿಷ್ಠಾನದ ಮುಖ್ಯಸ್ಥೆ ಸುಮತಿ ರಮೇಶ ಬಂಡಿಸಿದ್ದೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಂತೋಷ್, ಟಿಎಪಿಸಿಎಂಎಸ್ ನಿರ್ದೇಶಕ ಶಿವಯ್ಯ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್, ವಿ.ಇ. ನಾಗರಾಜು ಭಾಗವಹಿಸಿದ್ದರು.
ಇದಕ್ಕೂ ಮುನ್ನ ತಾಲ್ಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ₹12 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಗ್ರಂಥಾಲಯ ಕಟ್ಟಡವನ್ನು ರಮೇಶ ಬಂಡಿಸಿದ್ದೇಗೌಡ ಉದ್ಘಾಟಿಸಿದರು. ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಸವರಾಜು, ತಾ.ಪಂ. ಮಾಜಿ ಸದಸ್ಯರಾದ ಎಸ್. ಕಾಳೇಗೌಡ, ತಮ್ಮೇಗೌಡ, ಮುಖಂಡರಾದ ನಾಗರಾಜು, ಶಿವಣ್ಣ, ಚನ್ನಹಳ್ಳಿ ಮಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.