ಪಾಂಡವಪುರ: ರಾಷ್ಟ್ರಮಟ್ಟದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ, ಪಾಂಡವಪುರ ಪುರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸ್ವತಂತ್ರವಾಗಿ ಕಣಕ್ಕಿಳಿಸಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಟ್ಟಣದ 2ನೇ ವಾರ್ಡ್ನಲ್ಲಿ ಮಧು ಬೋರೇಗೌಡ ಹಾಗೂ 9ನೇ ವಾರ್ಡ್ನಲ್ಲಿ ಎನ್.ಸೋಮಶೇಖರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಯಾರೊಂದಿಗೂ ಹೊಂದಾಣಿ ಮಾಡಿಕೊಂಡಿಲ್ಲ. ಇಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪೂರಕವಾದ ವಾತಾವರಣವಿದೆ ಎಂದರು.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಒಂದೂ ಸ್ಥಾನವನ್ನು ಗೆಲ್ಲದಿದ್ದರೂ ಪಕ್ಷವು ದೊಡ್ಡಮಟ್ಟದಲ್ಲಿ ಬೇರುಬಿಟ್ಟಿದೆ. ಜೆಡಿಎಸ್ ಜತೆಗಿನ ಮೈತ್ರಿ ಕುರಿತು ಮುಂಬರುವ ದಿನಗಳಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ರೂಪುರೇಷೆ ತಯಾರು ಮಾಡಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿಯೊಂದಿಗೆ 28 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದ್ದೇವೆ. ಈ ಮೈತ್ರಿಯೂ ಜಿ.ಪಂ. ಮತ್ತು ತಾ.ಪಂ.ಚುನಾವಣೆಯಲ್ಲು ಆಗಲಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಈ ಪಕ್ಷಗಳ ಯಾವ ಅಭ್ಯರ್ಥಿ ಕಣದಲ್ಲಿರಬೇಕೆಂದು ನಿರ್ಧಾರವಾಗಲಿದ್ದು, ಅಭ್ಯರ್ಥಿಯ ಗೆಲುವಿಗೆ ಒಟ್ಟಾಗಿಯೇ ಶ್ರಮಿಸುತ್ತೇವೆ ಎಂದು ತಿಳಿಸಿದರು.
ಬಿಜೆಪಿ ಮುಖಂಡರಾದ ಡಾ.ಎನ್.ಎಸ್.ಇಂದ್ರೇಶ್, ಮುಖಂಡರಾದ ಎಚ್.ಎನ್.ಮಂಜುನಾಥ್, ಟಿ.ಶ್ರೀಧರ್, ಎಲ್.ಅಶೋಕ, ಮಂಗಳಾ ನವೀನ್, ಕೆನ್ನಾಳು ಕಾಂತರಾಜು, ಎಚ್.ಕೆ.ದೊರೆಸ್ಚಾಮಿ, ನವೀನ್ ಚಿಕ್ಕಮರಳಿ, ಅಭ್ಯರ್ಥಿಗಳಾದ ಮಧು ಬೋರೇಗೌಡ, ಎನ್.ಸೋಮಶೇಖರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.