ADVERTISEMENT

ಅನೈತಿಕ ಸಂಬಂಧ ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 14:46 IST
Last Updated 15 ಜನವರಿ 2020, 14:46 IST
ರೂಪಾ ಹಾಗೂ ಪ್ರಿಯಕರ ಮುತ್ತುರಾಜು ಅವರನ್ನು ಪಟ್ಟಣದ ಪೊಲೀಸರು ಬಂಧಿಸಿದರು
ರೂಪಾ ಹಾಗೂ ಪ್ರಿಯಕರ ಮುತ್ತುರಾಜು ಅವರನ್ನು ಪಟ್ಟಣದ ಪೊಲೀಸರು ಬಂಧಿಸಿದರು   

ಮದ್ದೂರು: ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದ ಘಟನೆ ಎರಡು ವರ್ಷಗಳ ನಂತರ ಬೆಳಕಿಗೆ ಬಂದಿದೆ.

ತಾಲ್ಲೂಕಿನ ರಾಜೇಗೌಡನದೊಡ್ಡಿ ಗ್ರಾಮದ ನಿವಾಸಿ ರಂಗಸ್ವಾಮಿ ಎರಡು ವರ್ಷಗಳ ಹಿಂದೆ ಕಾಣೆಯಾಗಿದ್ದರು. ಅನೈತಿಕ ಸಂಬಂಧಕ್ಕಾಗಿ ರಂಗಸ್ವಾಮಿ ಪತ್ನಿ ರೂಪಾ ತನ್ನ ಪ್ರಿಯಕರ ಮುತ್ತುರಾಜನೊಂದಿಗೆ ಸೇರಿ ಕೊಲೆ ಮಾಡಿ ಚೆಂದಹಳ್ಳಿ ಗ್ರಾಮದ ಕೆರೆಯ ಬಳಿ ಶವ ಹೂತು ಹಾಕಿದ್ದರು. ಈಗ ಸತ್ಯ ಒಪ್ಪಿಕೊಂಡಿದ್ದು ಮದ್ದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ರಂಗಸ್ವಾಮಿ ಚಾಮರಾಜನಗರ ಜಿಲ್ಲೆ ರಾಮಪುರ ಗ್ರಾಮದ ನಿವಾಸಿ. ಮದ್ದೂರಿನ ಭೀಮನಕೆರೆ ಗ್ರಾಮದ ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದರು. ರಂಗಸ್ವಾಮಿ ಹಾಗೂ ರೂಪಾ ಪ್ರೇಮ ವಿವಾಹ ಮಾಡಿಕೊಂಡು 15 ವರ್ಷ ಸಂಸಾರ ಮಾಡಿದ್ದರು. ದಂಪತಿಗೆ ಮೂರು ಮಕ್ಕಳಿದ್ದಾರೆ.

ADVERTISEMENT

ರೂಪಾ ರಾಜೇಗೌಡನದೊಡ್ಡಿಯ ಮುತ್ತುರಾಜನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ವಿಷಯ ತಿಳಿದ ರಂಗಸ್ವಾಮಿ ಗಲಾಟೆ ಮಾಡಿದ್ದರು. ರೂಪಾ ಹಾಗೂ ಮುತ್ತುಸ್ವಾಮಿ ಸೇರಿ ರಂಗಸ್ವಾಮಿ ಅವರನ್ನು ಕೊಲೆ ಮಾಡಿ ಶವ ಹೂತು ಹಾಕಿದ್ದರು. ಪತಿ ನಾಪತ್ತೆಯಾಗಿದ್ದಾರೆ ಎಂದು ಸುದ್ದಿ ಹಬ್ಬಿಸಿದ್ದರು.

ನಂತರ ರೂಪಾ ಮುತ್ತುರಾಜು ಜೊತೆ ಪಟ್ಟಣದಲ್ಲಿ ಸಂಸಾರ ನಡೆಸುತ್ತಿದ್ದರು. ಇಬ್ಬರ ನಡುವೆ ಜಗಳ ಉಂಟಾಗಿ ಕೊಲೆಯ ವಿಚಾರ ಬಾಯಿ ಬಿಟ್ಟಿದ್ದಾರೆ. ರಂಗಸ್ವಾಮಿ ಅಣ್ಣ ಮುತ್ತೇಲಿ ಮದ್ದೂರು ಠಾಣೆಗೆ ದೂರು ಸಲ್ಲಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವ ವಿಷಯ ಒಪ್ಪಿಕೊಂಡಿದ್ದಾರೆ.

ಕೆರೆ ಸಮೀಪ ಹೂತಿರುವ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.