ನಾಗಮಂಗಲ: ‘ಪ್ರವಾಹ, ಕೊರೊನಾ ಸೋಂಕು ಮುಂತಾದ ಸಮಸ್ಯೆಗಳನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಜ್ಯದ ಅಭಿವೃದ್ಧಿ ಕುರಿತ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರನ್ನು ಬೇರೆ ರೀತಿಯಿಂದ ಅರ್ಥ ಮಾಡಿಕೊಳ್ಳುವುದು ಬೇಡ. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಬಿಜೆಪಿಯಲ್ಲಿ ಯಾವುದೇ ಅಪಸ್ವರ ಇಲ್ಲ’ ಎಂದರು.
‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಅಧ್ಯಕ್ಷೆ, ರಾಜ್ಯ ಘಟಕದ ಅಧ್ಯಕ್ಷ ಎಲ್ಲರೂ ವಿವಿಧ ಭ್ರಷ್ಟಾಚಾರ ಆರೋಪಗಳಲ್ಲಿ ಜಾಮೀನು ಪಡೆದವರೇ ಆಗಿದ್ದಾರೆ. ತಾನು ಬಂಡೆ ಎಂದು ಹೇಳಿಕೊಳ್ಳುವ ನಾಯಕ ತನ್ನ ವಿರುದ್ಧ ತನಿಖೆ ಮಾಡಬಾರದು ಎಂದು ಸಿಬಿಐ ಗೆ ಅರ್ಜಿ ಸಲ್ಲಿಸಿರುವುದು ಏಕೆ? ಆರೋಪ ಮಾಡುವುದಕ್ಕೂ ಮೊದಲು ಇಂದಿರಾ ಕ್ಯಾಂಟೀನ್, ಹೌಸಿಂಗ್ ಬೋರ್ಡ್ ನಲ್ಲಿ ಏನಾಗಿದೆ ಎಂಬ ಬಗ್ಗೆ ಯೋಚಿಸಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.