ADVERTISEMENT

ಮಂಡ್ಯ | ನರೇಗಾ: ಜಿಲ್ಲೆಯಲ್ಲಿ ಗುರಿ ಮೀರಿದ ಸಾಧನೆ

27 ಲಕ್ಷ ಮಾನವ ದಿನಗಳ ಗುರಿ ನಿಗದಿ: ಶೇ 102.55ರಷ್ಟು ಪ್ರಗತಿ

​ಪ್ರಜಾವಾಣಿ ವಾರ್ತೆ
Published 2 ಮೇ 2025, 5:10 IST
Last Updated 2 ಮೇ 2025, 5:10 IST
ನರೇಗಾ ಯೋಜನೆಯಡಿ ಕೂಲಿ ಕೆಲಸದಲ್ಲಿ ನಿರತ ಕಾರ್ಮಿಕರು (ಸಂಗ್ರಹ ಚಿತ್ರ)
ನರೇಗಾ ಯೋಜನೆಯಡಿ ಕೂಲಿ ಕೆಲಸದಲ್ಲಿ ನಿರತ ಕಾರ್ಮಿಕರು (ಸಂಗ್ರಹ ಚಿತ್ರ)   

ಮಂಡ್ಯ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಗ್ರಾಮೀಣ ಭಾಗದ ಜನರ ಜೀವನೋಪಾಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024–25ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿಯು ಗುರಿ ಮೀರಿದ ಸಾಧನೆ (ಶೇ 102ರಷ್ಟು) ಮಾಡಿದೆ.

ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3,44,904 ಲಕ್ಷ ಕುಟುಂಬಗಳಿಗೆ ಉದ್ಯೋಗ ಚೀಟಿ ವಿತರಿಸಲಾಗಿದೆ. ಇದರಲ್ಲಿ 1,46,039 ಕುಟುಂಬಗಳ ಉದ್ಯೋಗ ಚೀಟಿಗಳು ಸಕ್ರಿಯವಾಗಿದ್ದು, 2,58,697 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 27 ಲಕ್ಷ ಮಾನವ ದಿನಗಳ ಗುರಿ ನಿಗದಿಯಾಗಿತ್ತು. ಇದರಲ್ಲಿ ಜಿಲ್ಲೆ 27,69,096 ಗುರಿ ಸಾಧಿಸಿದ್ದು, ಶೇ 102.55ರಷ್ಟು ಗುರಿ ಸಾಧಿಸಿದೆ. ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಶೇ 144.55ರಷ್ಟು ಗುರಿ ಸಾಧನೆ ಮಾಡಿ ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ. ಈ ತಾಲೂಕಿನಲ್ಲಿ ಒಟ್ಟು 5,28,538 ಮಾನವ ದಿನ ಸೃಜನೆ ಗುರಿ ಹೊಂದಲಾಗಿದ್ದು, ಇದರಲ್ಲಿ 7,64,005 ಮಾನವ ದಿನಗಳನ್ನು ಪೂರ್ತಿಗೊಳಿಸಿ ದಾಖಲೆ ಬರೆದಿದೆ. 

ADVERTISEMENT

ಕ್ರಿಯಾ ಯೋಜನೆ: 2025-26ನೇ ಸಾಲಿನಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಗ್ರಾ.ಪಂ.ಗಳಲ್ಲಿ ಗ್ರಾಮೀಣ ಭಾಗಕ್ಕೆ ಹಾಗೂ ಜನರ ಅನುಕೂಲವಾಗುವಂತಹ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು ಕಾಮಗಾರಿಗಳ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕೂಲಿ ಹೆಚ್ಚಳ: ಈ ಯೋಜನೆಯಡಿ ಆಯಾ ರಾಜ್ಯಗಳಿಗೆ ಅನುಗುಣವಾಗಿ ಕೂಲಿಯನ್ನು ನಿಗದಿ ಮಾಡಲಾಗಿದೆ. ಇದೀಗ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯವು ನರೇಗಾ ಯೋಜನೆ ಕೂಲಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರನ್ವಯ ಕರ್ನಾಟಕದಲ್ಲಿ 2024-25ನೇ ಸಾಲಿನಲ್ಲಿ ₹349ರಿಂದ ಕೂಲಿಯನ್ನು 2025-26ನೇ ಸಾಲಿನಲ್ಲಿ ₹370ಕ್ಕೆ ಕೂಲಿ ಹೆಚ್ಚಳ ಮಾಡಿದೆ. ಏ.1ರಿಂದ ₹370ಗಳ ಕೂಲಿ ಜಾರಿಯಲ್ಲಿರುತ್ತದೆ.

ಏಕೀಕೃತ ಸಹಾಯವಾಣಿ: ಮಹಾತ್ಮ ಗಾಂಧಿ ನರೇಗಾ ಯೋಜನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಯೋಜನೆಗಳ ಮಾಹಿತಿಗಾಗಿ ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ ಏಕೀಕೃತ ಸಹಾಯವಾಣಿ 8277506000 ಅನ್ನು ಸ್ಥಾಪಿಸಲಾಗಿದೆ. ಯಾವುದೇ ಮಾಹಿತಿಗೆ ಹಾಗೂ ಕುಂದುಕೊರತೆಗಳ ನಿವಾರಣೆಗಾಗಿ ಈ ಸಂಖ್ಯೆಗೆ ಕರೆ ಮಾಡಬಹುದು ಎಂದು ಸಿಇಒ ಕೆ.ಆರ್‌.ನಂದಿನಿ ತಿಳಿಸಿದ್ದಾರೆ.

ಕೆ.ಆರ್‌.ನಂದಿನಿ
3.44 ಲಕ್ಷ ಕುಟುಂಬಗಳಿಗೆ ಉದ್ಯೋಗ ಚೀಟಿ ಏ.1ರಿಂದ ₹370ಕ್ಕೆ ಕೂಲಿ ಹೆಚ್ಚಳ ಸಹಾಯವಾಣಿಗೆ 8277506000 ಕರೆ ಮಾಡಿ

‘ನರೇಗಾ’ ಸದುಪಯೋಗ ಪಡೆಯಿರಿ

‘ನರೇಗಾ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳು ಒಳಗೊಂಡಂತೆ 2024–25ನೇ ಸಾಲಿನಲ್ಲಿ ವಾರ್ಷಿಕ ಗುರಿ ಮೀರಿ ಮಂಡ್ಯ ಜಿಲ್ಲೆ ಶೇ 102ರಷ್ಟು ಮಾನವ ದಿನ ಸೃಜನೆ ಮಾಡಿ ಪ್ರಗತಿ ಸಾಧಿಸಿದೆ. ನರೇಗಾ ಯೋಜನೆಯು ಗ್ರಾಮೀಣ ಭಾಗದ ಜನರ ಬದುಕಿಗೆ ಆಶಾಕಿರಣವಾಗಿದ್ದು ಏ.1ರಿಂದ ಕೂಲಿ ದರ ಹೆಚ್ಚಾಗಿದೆ. ಕೂಲಿಕಾರರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕೆ.ಆರ್.ನಂದಿನಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.