ಮಂಡ್ಯ: ಎನ್ಡಿಎ ನೇತೃತ್ವದ ಕೇಂದ್ರ ಬಜೆಟ್ನಲ್ಲಿ ಶೋಷಿತ ಸಮುದಾಯಗಳನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಸರ್ ಎಂ.ವಿ. ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಯೋಜನಾ ಆಯೋಗದ 1984ರ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಿ (ಆಂಧ್ರ- ಕರ್ನಾಟಕ ರಾಜ್ಯ ಸರ್ಕಾರಗಳಂತೆ) ಕೇಂದ್ರ ಬಜೆಟ್ನಲ್ಲೂ ಪರಿಶಿಷ್ಟ ಜಾತಿ, ಪಂಗಡಗಳ ಜಾತಿಗಳ ಜನಸಂಖ್ಯೆಗನುಗುಣವಾಗಿ ಕೇಂದ್ರ ಬಜೆಟ್ನ ಅಭಿವೃದ್ಧಿ ಅನುದಾನದಲ್ಲಿ ಮೀಸಲಿಡುವ ಕಾಯಿದೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಜಾತಿ ಜನಗಣತಿಯನ್ನು ನಡೆಸಲು ಅನುದಾನ ಮೀಸಲಿರಿಸಲು ಕೇಂದ್ರ ಸರ್ಕಾರ ಬಜೆಟ್ನಲ್ಲಿ ಘೋಷಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜಿಲ್ಲೆಯ ಎಲ್ಲಾ ಹೋಬಳಿ ಕೇಂದ್ರ ಸ್ಥಾನದ ಪ್ರಾಥಮಿಕ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಜೊತೆಗೆ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿಸುವ ಮೂಲಕ ಜಿಲ್ಲೆಯ ಜನತೆಯ ಆರೋಗ್ಯ ಸುಧಾರಣೆಗೆ ಪ್ರಸ್ತುತ ಕೇಂದ್ರ ಬಜೆಟ್ನಲ್ಲಿ ಘೋಷಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಪಡಿಸಿದರು.
ಸಮಿತಿ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ, ಮುಖಂಡರಾದ ಕೆ.ಎಂ. ಅನಿಲ್ ಕುಮಾರ್, ಬಿ.ಆನಂದ್, ಸುಶ್ಮಿತಾ ಆನಂದ್, ಈಚಗೆರೆ ನಾಗರಾಜ್, ವೈ. ಸುರೇಶ್ಕುಮಾರ್, ರಾಮಕೃಷ್ಣ, ಹೊನ್ನಯ್ಯ, ಸಿದ್ದಯ್ಯ, ವೆಂಕಟೇಶ, ಮಹದೇವು, ಮುತ್ತುರಾಜು, ಸುರೇಶ, ಬಸವರಾಜ್, ಭಾಗ್ಯಮ್ಮ, ಗೀತಾ, ಸರಳಾ, ಸುಕನ್ಯಾ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.