ADVERTISEMENT

ಮಂಡ್ಯ | ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕುಮಾರ ಸೂಚನೆ

ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸೂಚನಾ ಫಲಕ ಅಳವಡಿಸಿ: ಜಿಲ್ಲಾಧಿಕಾರಿ ಕುಮಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 2:44 IST
Last Updated 3 ಸೆಪ್ಟೆಂಬರ್ 2025, 2:44 IST
ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌.ಎಚ್‌– 275) ರಸ್ತೆಗೆ ಸಂಬಂಧಿಸಿದಂತೆ ಇರುವ ಸಂಚಾರದ ತೊಡಕುಗಳ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಅವರು ಮಂಗಳವಾರ ಪರಿಶೀಲನೆ ನಡೆಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಇದ್ದಾರೆ  
ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌.ಎಚ್‌– 275) ರಸ್ತೆಗೆ ಸಂಬಂಧಿಸಿದಂತೆ ಇರುವ ಸಂಚಾರದ ತೊಡಕುಗಳ ಬಗ್ಗೆ ಜಿಲ್ಲಾಧಿಕಾರಿ ಕುಮಾರ ಅವರು ಮಂಗಳವಾರ ಪರಿಶೀಲನೆ ನಡೆಸಿದರು. ಶಾಸಕ ರಮೇಶ ಬಂಡಿಸಿದ್ದೇಗೌಡ ಇದ್ದಾರೆ     

ಮಂಡ್ಯ: ಜಿಲ್ಲೆಯಲ್ಲಿ ಹಾದು ಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌.ಎಚ್‌–275) ರಸ್ತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕುಮಾರ ಅವರು ಮಂಗಳವಾರ ಪರಿಶೀಲನೆ ನಡೆಸಿದರು.
 
ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿಯ ಪರಿಶೀಲನೆ ನಡೆಸಿ, ಸದರಿ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಹಾಗೂ ಇದೇ ರೀತಿಯಾಗಿ ಜಿಲ್ಲೆಯಾದ್ಯಂತ ಇರುವ ಅಪೂರ್ಣವಾದ ಒಳಚರಂಡಿಗಳ ಕಾಮಗಾರಿಗಳನ್ನು ಸಹ ತುರ್ತಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ತೂಬಿನಕೆರೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯ ನಿರ್ಗಮನ ಕೇಂದ್ರದ ಬಳಿ ಅತಿ ಹೆಚ್ಚು ವಾಹನಗಳ ದಟ್ಟಣೆಯಾಗುತ್ತಿದ್ದು, ಇದರಿಂದಾಗಿ ನಿರಂತರವಾಗಿ ಹೆಚ್ಚಿನ ಅಪಘಾತಗಳಾಗುತ್ತಿರುವುದರಿಂದ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ನಿಖರವಾಗಿ ಹಾಗೂ ಸ್ಪಷ್ಟವಾಗಿ ಸೂಚನೆ ನೀಡುವ ವಸ್ತು ವಿಷಯವುಳ್ಳ ಸೂಚನಾ ಫಲಕಗಳನ್ನು ಅಳವಡಿಸುವಂತೆ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿಯ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾದಚಾರಿ ಸೇತುವೆಗಳನ್ನು ನಿರ್ಮಾಣ ಮಾಡುವ ಸಂಬಂಧ ಚಾಲ್ತಿಯಲ್ಲಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ADVERTISEMENT

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯು (NH -275) ರಾಷ್ಟ್ರಮಟ್ಟದ ಅತ್ಯುತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಸಾರಿಗೆ, ಪ್ರವಾಸೋದ್ಯಮ ವಲಯಗಳ ಬೆಳವಣಿಗೆಗೆ ಸಹಕಾರಿಯಾಗಿರುತ್ತದೆ. ಜಿಲ್ಲೆಯ ಆರ್ಥಿಕ ಅಭಿವೃದ್ಧಿಯ ಜೊತೆಗೆ ಸುರಕ್ಷಿತ ರಸ್ತೆ ಪ್ರಯಾಣಕ್ಕೆ ಅನುಕೂಲವಾಗಿರುವ ಹೆದ್ದಾರಿಗೆ ಸಂಬಂಧಿಸಿದಂತೆ ಅಪೂರ್ಣವಾಗಿರುವ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ, ಜೊತೆಗೆ ಅಪಘಾತಗಳನ್ನು ತಪ್ಪಿಸುವಲ್ಲಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅಳವಡಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಪರಿಶೀಲನೆಯ ವೇಳೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್ಪಿ ತಿಮ್ಮಯ್ಯ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕ ಎಂ.ಎಸ್ ಒಬಲೇ ಹಾಜರಿದ್ದರು.

ಸರ್ವಿಸ್‌ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನುಗ್ಗುವ ವಾಹನಗಳು | ಎಕ್ಸಿಟ್‌ ಮತ್ತು ಎಂಟ್ರಿ ವೇಗಳಲ್ಲಿ ಸಂಚಾರಕ್ಕೆ ಅಡ್ಡಿಯಾದ ಕಲ್ಲುಗಳು
ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಂಡರ್ ಪಾಸ್‌ಗಳಲ್ಲಿ ಚಾಲಕರಿಗೆ ವಾಹನ ಚಾಲನೆ ಸಮಯದಲ್ಲಿ ಅತಿ ಹೆಚ್ಚಿನ ಬೆಳಕಿನ ವ್ಯವಸ್ಥೆಗಾಗಿ ಸೂಕ್ತ ಲೈಟಿಂಗ್ಸ್ ವ್ಯವಸ್ಥೆ ಮಾಡಿ
ಕುಮಾರ ಜಿಲ್ಲಾಧಿಕಾರಿ ಮಂಡ್ಯ

ಸರ್ವಿಸ್‌ ರಸ್ತೆ ಒನ್‌ ವೇ ಅಲ್ಲ!

ಬೆಂಗಳೂರು– ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ಬಹುತೇಕ ಬೈಕ್‌ ಟ್ರ್ಯಾಕ್ಟರ್‌ ಟ್ರಕ್‌ಗಳು ವಿರುದ್ಧ ದಿಕ್ಕಿನಲ್ಲಿ ಅಡ್ಡಾದಿಡ್ಡಿ ಚಲಿಸುತ್ತಿರುವ ಕಾರಣ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.  ‘ಸರ್ವಿಸ್‌ ರಸ್ತೆಗಳು ಒನ್‌ವೇ ಅಲ್ಲ ಇದು ಟೂ ವೇ. ಹೀಗಾಗಿ ಹೆದ್ದಾರಿ ಪಕ್ಕ ಹಾದು ಹೋಗಿರುವ ಎರಡೂ ಬದಿಯ ಸರ್ವಿಸ್‌ ರಸ್ತೆಗಳಲ್ಲಿ ಎಡಬದಿಯಿಂದಲೇ ಚಲಿಸಬೇಕು ಎದುರಿನಿಂದ ಬರುವವರು ಬಲಬದಿಯಿಂದ ಹಾದು ಹೋಗಬೇಕು. ಆದರೆ ಸರ್ವಿಸ್‌ ರಸ್ತೆಗಳು ಒನ್‌ ವೇ ಎಂಬ ತಪ್ಪು ಕಾರಣದಿಂದ ಬೈಕ್‌ ಟ್ರಕ್‌ಗಳು ಸರ್ವಿಸ್‌ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿವೆ. ಈ ಬಗ್ಗೆ ಚಾಲಕರು ಎಚ್ಚರವಹಿಸಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.