ಮಳವಳ್ಳಿ: ಪ್ರಸ್ತುತ ದಿನಮಾನಗಳಲ್ಲಿ ಗುರು-ಶಿಷ್ಯರ ನಡುವಿನ ಬಾಂಧವ್ಯ ಕುಸಿಯುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೆಂಗೇರಿ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶಾಂತಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ವೇದಮೂರ್ತಿ ಹಾಗೂ ನಿವೃತ್ತ ಪ್ರಾಧ್ಯಾಪಕ ಕೆ.ಎಂ.ಜಗ್ನನಾಥ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಬದುಕನ್ನು ಹಸನು ಮಾಡುವ ಶಿಕ್ಷಕ ವೃತ್ತಿ ಪವಿತ್ರವಾಗಿದೆ. ಶಿಕ್ಷಕರು ಹಾಗೂ ಉಪನ್ಯಾಸಕರು ಎಂದರೆ ತಾತ್ಸರದಿಂದ ನೋಡುವ ಪ್ರಸ್ತುತ ದಿನದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಶಿಸ್ತು ಕಲಿಸಿದ ಗುರುಗಳನ್ನು ನಿವೃತ್ತಿಯ ನಂತರವೂ ಅಭಿನಂದಿಸುತ್ತಿರುವುದು ಸಂತಸ ತಂದಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಕೆ.ಎನ್.ನಾಗೇಗೌಡರು ಶಾಂತಿ ಶಿಕ್ಷಣ ಸಂಸ್ಥೆ ತೆರೆದು ಹಳ್ಳಿಗಾಡಿನ ಮಕ್ಕಳ ಭವಿಷ್ಯಕ್ಕೆ ದಾರಿ ದೀಪವಾಗಿದ್ದಾರೆ ಎಂದು ಶ್ಲಾಘಿಸಿದರು.
ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ವೇದಮೂರ್ತಿ ಮಾತನಾಡಿ, 35 ವರ್ಷಗಳ ಕಾಲ ಕಾಲೇಜಿನ ಉಪನ್ಯಾಸಕನಾಗಿ, ಪ್ರಾಂಶುಪಾಲನಾಗಿ ಕಾರ್ಯನಿರ್ವಹಿಸಲು ಅನೇಕರು ಅನುವು ಮಾಡಿಕೊಟ್ಟಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೈಲಾದ ಸೇವೆ ಸಲ್ಲಿಸಿದ್ದೇವೆ ಎಂದರು.
ನಿವೃತ್ತ ಪ್ರಾಂಶುಪಾಲ ಪ್ರೊ.ಪುಟ್ಟಸ್ವಾಮಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಲು ಕೆ.ಎನ್.ನಾಗೇಗೌಡರ ಆಶಯದಂತೆ ಎಲ್ಲರೂ ಕೆಲಸ ಮಾಡಿದ್ದೇವೆ. ನಿವೃತ್ತಿ ಹೊಂದಿ ಐದಾರು ವರ್ಷ ಕಳೆದರೂ ನಮ್ಮ ಮತ್ತು ವಿದ್ಯಾರ್ಥಿಗಳ ಒಡನಾಟ ಉತ್ತಮವಾಗಿ ಇರುವುದು ಸಂತಸ ತಂದಿದೆ ಎಂದರು.
ನಿವೃತ್ತ ಪ್ರಾಧ್ಯಾಪಕ ಕೆ.ಎಂ.ಜಗ್ನನಾಥ್ ಮಾತನಾಡಿದರು. ಮೈಸೂರು ವಿ.ವಿಯ ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜು, ಪ್ರಮುಖರಾದ ಎಂ.ಎಚ್.ಕೆಂಪಯ್ಯ, ಅನಿತಾ, ಅತಾಉಲ್ಲಾ ಸಾಬ್, ಟಿ.ಎಂ.ಪ್ರಕಾಶ್, ಚಂದ್ರಶೇಖರ್ ದಡದಪುರ, ಮಹೇಶ್, ಶಿವಕುಮಾರ್, ಸೋಮೇಗೌಡ, ಕೆಂಪರಾಜು, ನಟೇಶ್, ಚಂದ್ರಶೇಖರ್, ಆರ್.ಎನ್.ವಿಶ್ವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.