ADVERTISEMENT

ಸಂಸದೆ ಸುಮಲತಾಗೆ ತತ್ವ, ಸಿದ್ಧಾಂತವಿಲ್ಲ; ಬಿ.ಟಿ.ಲಲಿತಾ ನಾಯಕ್

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 14:24 IST
Last Updated 25 ಮಾರ್ಚ್ 2023, 14:24 IST
 ಬಿ.ಟಿ.ಲಲಿತಾನಾಯಕ್
ಬಿ.ಟಿ.ಲಲಿತಾನಾಯಕ್    

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್‌ ಅವರಿಗೆ ಯಾವುದೇ ತತ್ವ ಸಿದ್ಧಾಂತವಿಲ್ಲ. ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದು ಅವರು ಅಲ್ಲಿಯೇ ಇರಲಿ’ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.

‘ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿ ಚಾರಿತ್ರ್ಯ ಮುಖ್ಯ. ರಾಜಕಾರಣದಲ್ಲಿ ಯಾರೂ ಯಾರಿಗೂ ಅನಿವಾರ್ಯವೇನಲ್ಲ. ಯಾರಿಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ ಗೊತ್ತಿರುವುದಿಲ್ಲವೋ ಅವರ ಅವಶ್ಯಕತೆ ನಮಗಿಲ್ಲ. ಸುಮಲತಾ ಅವರು ಸರ್ವೋದಯ ಪಕ್ಷಕ್ಕೆ ಬೆಂಬಲ ಕೊಡುತ್ತೇನೆಂದರೂ ಬೇಕಾಗಿಲ್ಲ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮೋದಿ ಉಪನಾಮ ಇಟ್ಟುಕೊಂಡಿರುವವರೆಲ್ಲಾ ವಂಚಕರೇ ಎಂದು ರಾಹುಲ್ ಗಾಂಧಿ ಹೇಳಿರುವುದು ಮಹಾಪರಾಧವೇನಲ್ಲ. ರಾಹುಲ್‌ ಅವರ ಈ ಒಂದು ಸಣ್ಣ ಮಾತನ್ನು ಮುಂದಿಟ್ಟುಕೊಂಡು ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿರುವುದು, ಲೋಕಸಭಾ ಸದಸ್ಯತ್ವ ರದ್ದುಪಡಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ದುರಂತವೇ ಸರಿ’ ಎಂದರು.

ADVERTISEMENT

ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ ‘ಈ ಮೊದಲು ಚುನಾವಣೆಯಲ್ಲಿ ನನಗೆ ಬೆಂಬಲ ನೀಡುವುದಾಗಿ ಸುಮಲತಾ ಅವರು ಹೇಳಿದ್ದರು. ಈಗ ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಈ ಬೆಳವಣಿಗೆ ನಂತರ ಸುಮಲತಾ ಅವರನ್ನು ನಾನು ಭೇಟಿಯೂ ಆಗಿಲ್ಲ. ಚುನಾವಣೆ ವಿಚಾರವಾಗಿ ಯಾವುದೇ ಚರ್ಚೆ ನಡೆಸಿಲ್ಲ’ ಎಂದರು.

‘ಚಿತ್ರನಟ ದರ್ಶನ್ ಅವರು ನನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಕಳೆದ ಲೋಕಸಭಾ ಚುನಾವಣೆ ಸಮಯದಲ್ಲೇ ಅವರು ಘೋಷಿಸಿದ್ದರು. ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹಾಕುವುದಿಲ್ಲವೆಂದು ಸ್ಪಷ್ಟಪಡಿಸಿಲ್ಲ. ನಾನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿದ್ದು ನಿಜ. ಆದರೆ, ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಮತ್ತು ನಿಮ್ಮನ್ನೇ ಬೆಂಬಲಿಸುವುದಾಗಿ ನಿಖರವಾಗಿ ಏನನ್ನೂ ಹೇಳಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.