ಮಂಡ್ಯ: ‘ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಸಂಸ್ಥಾಪನೆ ಅಂಗವಾಗಿ ರಾಜ್ಯ ಒಲಿಂಪಿಕ್ ಸಂಸ್ಥೆಯು ಜಿಲ್ಲಾಡಳಿತದ ಸಹಯೋಗದಲ್ಲಿ ಜುಲೈ 6 ರಂದು ಒಲಿಂಪಿಕ್ ದಿನಾಚರಣೆ ನಡೆಸಲು ನಿರ್ಧರಿಸಿದೆ. ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಲು ಅಧಿಕಾರಿಗಳು ಸಿದ್ಧತೆ ನಡೆಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಯೋಗೇಶ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಒಲಿಂಪಿಕ್ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ವಿವಿಧ ಜಿಲ್ಲೆಗಳಲ್ಲಿ ಒಲಿಂಪಿಕ್ ದಿನಾಚರಣೆ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ದಿನಾಚರಣೆ ಆಯೋಜನೆ ಮಾಡಲಾಗುತ್ತಿದೆ. ಕ್ರೀಡೆಗಳು ಯುವ ಜನರಲ್ಲಿ ಆರೋಗ್ಯ ವೃದ್ಧಿಸುವ ಜೊತೆಗೆ ಉತ್ಸಾಹದಿಂದ ಇರುವಂತೆ ಮಾಡುತ್ತವೆ. ಈ ನಿಟ್ಟಿನಲ್ಲಿ ಯುವ ಜನರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಒಲಿಂಪಿಕ್ ದಿನಾಚರಣೆ ಮಕ್ಕಳ ಮನಸ್ಸಿನಲ್ಲಿ ಸ್ಫೂರ್ತಿ ತುಂಬಬೇಕು’ ಎಂದರು.
‘ಜುಲೈ 6ರಂದು ಬೆಳಿಗ್ಗೆ 8 ಗೆಂಟೆಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಚೇರಿಯಿಂದ ಮ್ಯಾರಥಾನ್ ಆರಂಭವಾಗಲಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಂದ ಓಟ ಆರಂಭವಾಗಿ ಹೊಸಹಳ್ಳಿ ವೃತ್ತ, ಬೆಸಗರಹಳ್ಳಿ ರಾಮಣ್ಣ ವೃತ್ತ ಹಾಗೂ ಬಾಲಭವನಕ್ಕೆ ಬಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸೇರುತ್ತದೆ. ಓಟದಲ್ಲಿ ಭಾಗವಹಿಸುವವರ ಹಾಗೂ ಸ್ವಯಂ ಸೇವಕರಿಗೆ ಪೊಲೀಸರು ಭದ್ರತೆ ನೀಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಟೀ ಶರ್ಟ್, ಲಘು ಉಪಹಾರ ನೀಡಲು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಕಾರ್ಯದರ್ಶಿ ಅನಂತ್ ರಾಜು, ಯುವ ಜನ ಸೇವಾ ಮತ್ತು ಕ್ರೀಡೆ ಇಲಾಖೆ ಸಹಾಯಕ ನಿರ್ದೇಶಕರಾದ ನಂದೀಶ್, ರೋಟರಿ ಸಕ್ಕರೆ ನಾಡು ಸಂಘಟನೆ ಅಧ್ಯಕ್ಷ ಕೆ.ಎಂ.ಮಹೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.