ಪ್ರಜಾವಾಣಿ ವಾರ್ತೆ
ಪಾಂಡವಪುರ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕಡೆ ಶ್ರಾವಣ ಶನಿವಾರ ಪ್ರಯುಕ್ತ ವಿಶೇಷ ಪೂಜೆ ಮತ್ತು ಜಾತ್ರಾ ಮಹೋತ್ಸವವು ಸಂಭ್ರಮದಿಂದ ಜರುಗಿದವು.
ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನವನ್ನು ಶುಕ್ರವಾರ ಸಂಜೆಯಿಂದಲೇ ಹಲವು ಬಗೆಯ ವಿದ್ಯುತ್ ದೀಪಗಳಿಂದ ಹಾಗೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.
ಶನಿವಾರ ಬೆಳಿಗ್ಗೆಯಿಂದಲೇ ಲಕ್ಷ್ಮೀ ನಾರಾಯಣಸ್ವಾಮಿ ದೇವರಿಗೆ ಭಕ್ತರು ಪೂಜೆ ಸಲ್ಲಿಸಿದರು.
ದೇವಸ್ಥಾನದ ಆವರಣದಲ್ಲಿ ಅಂಗಡಿ ಮುಂಗಟ್ಟುಗಳು ಸೇರಿದ್ದವು. ಮಧ್ಯಾಹ್ನದ ವೇಳೆಗೆ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವರ ಉತ್ಸವವನ್ನು ಭಕ್ತರು ಹೊತ್ತಿ ಮೆರೆಸಿದರು. ಜಾತ್ರೆಗೆ ಸೇರಿದ್ದ ಅಪಾರ ಜನಸ್ತೋಮವು ದೇವರಿಗೆ ಪೂಜೆ ಸಲ್ಲಿಸಿತು. ಲಕ್ಷ್ಮೀ ನಾರಾಯಣಸ್ವಾಮಿ ಉತ್ಸವಕ್ಕೆ ಭಕ್ತರು ಕೈಮುಗಿದು ತಮ್ಮ ಭಕ್ತಿ ಭಾವ ಮೆರೆದರು.
ಅನ್ನಸಂತರ್ಪಣೆ: ದೇವಸ್ಥಾನದ ಆವರಣದಲ್ಲಿ ಜಾತ್ರೆಯಲ್ಲಿ ಭಾಗವಹಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ, ಜೆಡಿಎಸ್ ಮುಖಂಡ ಸಿ.ಎಸ್.ಪುಟ್ಟರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು ಸೇರಿದಂತೆ ಹಲವು ಗಣ್ಯರು ಜಾತ್ರಾಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.