ADVERTISEMENT

ಮಂಡ್ಯ: ಮುಖ್ಯಮಂತ್ರಿಗಳ ಅಣಕು ಶವಯಾತ್ರೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2022, 12:50 IST
Last Updated 16 ನವೆಂಬರ್ 2022, 12:50 IST
ಕಬ್ಬಿಗೆ ಬೆಂಬಲ ಬೆಲೆ, ಹಾಲಿಗೆ ಹೆಚ್ಚು ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತಸಂಘದ ಸದಸ್ಯರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿದರು
ಕಬ್ಬಿಗೆ ಬೆಂಬಲ ಬೆಲೆ, ಹಾಲಿಗೆ ಹೆಚ್ಚು ದರ ನಿಗದಿ ಮಾಡುವಂತೆ ಒತ್ತಾಯಿಸಿ ರೈತಸಂಘದ ಸದಸ್ಯರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿದರು   

ಮಂಡ್ಯ: ಕಬ್ಬಿಗೆ ನ್ಯಾಯಯುತ ದರ ನೀಡುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು ತಪ್ಪಿದ್ದಾರೆ ಎಂದು ಆರೋಪಿಸಿ ರೈತಸಂಘದ ಸದಸ್ಯರು ಬುಧವಾರ ಮುಖ್ಯಮಂತ್ರಿಗಳ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿ ಟನ್‌ ಕಬ್ಬಿಗೆ ₹ 4,500 ದರ ನಿಗದಿ ಮಾಡಬೇಕು, ಲೀಟರ್‌ ಹಾಲಿಗೆ ₹ 40 ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ರೈತಸಂಘ ನಡೆಸುತ್ತಿರುವ ಹೋರಾಟ 10ನೇ ದಿನಕ್ಕೆ ತಲುಪಿದ್ದು ಬುಧವಾರ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಸಂಜಯ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮುಖ್ಯಮಂತ್ರಿಗಳ ಅಣಕು ಶವಯಾತ್ರೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳು, ಎತ್ತಿನ ಗಾಡಿಗಳು, ಜನುವಾರುಗಳನ್ನು ನಿಲ್ಲಿಸಿದ್ದ ಕಾರಣ ಅರ್ಧಗಂಟೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮುಂಜಾಗೃತಾ ಕ್ರಮವಾಗಿ ಜಿಲ್ಲಾಧಿಕಾರಿ ಕಚೇರಿ ಸುತ್ತಲೂ ಬ್ಯಾರಿಕೇಡ್‌ ಹಾಕಿ ಪೊಲೀಸರು ಭದ್ರತೆ ಒದಗಿಸಿದ್ದರು.

ADVERTISEMENT

‘2 ತಿಂಗಳ ಹಿಂದೆಯೇ ನಾವು ಪ್ರತಿಭಟನೆ ನಡೆಸಿದ್ದೆವು, ಆಗ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಂಗಳೊಳಗೆ ಸಿಹಿ ಸುದ್ದಿ ನೀಡುವುದಾಗಿ ಮಾತು ನೀಡಿದ್ದರು, ಆದರೆ ಅವರು ಈಗ ಮಾತು ತಪ್ಪಿದ್ದಾರೆ. 10 ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಜನಪ್ರತಿನಿಧಿಯೂ ನಮ್ಮ ಅಹವಾಲು ಕೇಳಿಲ್ಲ. ಹೀಗಾಗಿ ನಮ್ಮ ಹೋರಾಟವನ್ನು ತೀವ್ರಗೊಳಿಸಿದ್ದೇವೆ’ ಎಂದು ರೈತಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಎಸ್‌.ಸಿ.ಮಧುಚಂದನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.